ನವದೆಹಲಿ: ವಿಶ್ವಕಪ್ ಟೂರ್ನಿಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಭಾರತ ಕ್ರಿಕೆಟ್ ತಂಡಕ್ಕೆ ಸಂಕಷ್ಟವೊಂದು ಎದುರಾಗಿದ್ದು, ಟೂರ್ನಿಗೆ ಆಯ್ಕೆಯಾಗಿದ್ದ ಆಲ್ರೌಂಡರ್ ಕೇದಾರ್ ಜಾಧವ್ ಅವರು ಗಾಯದ ಸಮಸ್ಯೆಯಿಂದಾಗಿ ಐಪಿಎಲ್ ನಿಂದ ನಿರ್ಗಮಿಸಿದ್ದಾರೆ.
ಪ್ರಸ್ತುತ ಐಪಿಎಲ್ 12 ಅವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿರುವ ಕೇದಾರ್ ಜಾಧವ್, ಭಾನುವಾರ ನಡೆದ ಚೆನ್ನೈ ಮತ್ತು ಕಿಂಗ್ಸ್ ಇಲೆವನ್ ಪಂಜಾಬ್ ನಡುವಿನ ಪಂದ್ಯದಲ್ಲಿ ಗಾಯದ ಸಮಸ್ಯೆಗೆ ತುತ್ತಾಗಿದ್ದರು. ಪರಿಣಾಮ ಐಪಿಎಲ್ ನ ಉಳಿದ ಪಂದ್ಯಗಳಿಗೆ ಅವರು ಅಲಭ್ಯರಾಗಿದ್ದಾರೆ.
ವಿಶ್ವಕಪ್ಗೆ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಕೇದರ್ ಜಾಧವ್ ಅವರನ್ನು ಪ್ರಮುಖ ಆಲ್ರೌಂಡರ್ ಎಂದು ಆಯ್ಕೆ ಮಾಡಲಾಗಿತ್ತು. ಭಾನುವಾರ ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಓವರ್ ಥ್ರೋ ತಡೆಯಲು ಹೋಗಿ ಜಾಧವ್ ಅವರು ಗಾಯಗೊಂಡಿದ್ದರು. ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರು ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ ಎಂದು ಖಚಿತ ಪಡಿಸಿದ್ದರು.
ಮೇ 25ರಂದು ಟೀಂ ಇಂಡಿಯಾ, ನ್ಯೂಜಿಲೆಂಡ್ ತಂಡದ ವಿರುದ್ಧ ಆಭ್ಯಾಸ ಪಂದ್ಯ ಆಡುವ ಮೂಲಕ ವಿಶ್ವಕಪ್ ಪಯಣ ಆರಂಭ ಮಾಡಲಿದೆ. ಜೂನ್ 05 ರಂದು ನಡೆಯುವ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ತಂಡ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ.