ಮಂಗಳೂರು, ನ. 2: ಸುರತ್ಕಲ್ನಲ್ಲಿ ಕಾರ್ಯನಿರ್ವಾಹಿಸುತ್ತಿರುವ ಟೋಲ್ ಗೇಟನ್ನು ಮುಚ್ಚಿಸಬೇಕು ಎಂದು ಆಗ್ರಹಿಸಿ ಟೋಲ್ ವಿರೋಧಿ ಹೋರಾಟ ಸಮಿತಿಯ ಸದಸ್ಯರು ನಗರದ ನಂತೂರು-ಪಂಪ್ವೆಲ್ ಮಧ್ಯೆ ಇರುವ ಹೆದ್ದಾರಿ ಪ್ರಾಧಿಕಾರದ ಕಚೇರಿ ಮುಂದೆ ಗುರುವಾರ ಧರಣಿ ನಡೆಸಿದರು.
ಪ್ರತಿಭಟನಕಾರರನ್ನುದ್ದೇಶಿಸಿ ಡಿವೈಎಫ್ಐ ರಾಜ್ಯಾಧ್ಯಕ್ಷ ಹಾಗು ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಅವರು ಮಾತನಾಡಿ, ಸುರತ್ಕಲ್ನಲ್ಲಿ ಅಕ್ರಮವಾಗಿ ಟೋಲ್ ಸಂಗ್ರಹಿಸುಲಾಗುತ್ತಿದೆ. ಹೆದ್ದಾರಿ ನಿಯಮಗಳಿಗೆ ವಿರುದ್ಧವಾಗಿ 10 ಕಿ.ಮೀ. ಅಂತರದಲ್ಲಿ ಸುರತ್ಕಲ್ ಎನ್ಐಟಿಕೆ ಹಾಗೂ ಹೆಜಮಾಡಿಯಲ್ಲಿ ಕಾನೂನು ಬಾಹಿರವಾಗಿ ಟೋಲ್ ಸಂಗ್ರಹ ಮಾಡಲಾಗುತ್ತದೆ ಎಂದು ಆರೋಪಿಸಿದರು.
ಇದೇ ಸಂದರ್ಭದಲ್ಲಿ ಹೆದ್ದಾರಿಯನ್ನು ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿದ ಅವರು, ಕೂಳೂರು, ಪಣಂಬೂರು, ಬೈಕಂಪಾಡಿ, ಸುರತ್ಕಲ್ ಭಾಗದ ಹೆದ್ದಾರಿ ರಸ್ತೆಯು ಹೊಂಡ ಗುಂಡಿಗಳಿಂದ ತುಂಬಿಹೋಗಿದೆ. ಈ ಬಗ್ಗೆ ಕಳೆದ ತಿಂಗಳು ಸುರತ್ಕಲ್ನಲ್ಲಿ ಪ್ರತಿಭಟನೆ ನಡೆಸಿದರೂ ಅಧಿಕಾರಿಗಳು ಸ್ಪಂದಿಸಲಿಲ್ಲ. ಆ ಹಿನ್ನಲೆಯಲ್ಲಿ ಇದೀಗ ಮತ್ತೆ ಧರಣಿ ನಡೆಸಲಾಗುತ್ತದೆ. ಇದಕ್ಕೂ ಸ್ಪಂದಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ತಿಳಿಸಿದರು.
ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಬಜಾಲ್, ಸ್ಥಳೀಯ ಮನಪಾ ಸದಸೈ ರೇವತಿ, ಸಮಿತಿಯ ಮುಖಂಡರಾದ ವಿಶ್ವನಾಥ್, ನೌಶಾದ್ ಬೆಂಗ್ರೆ, ಸಲೀಂ ಕಾನ, ಅಝ್ಮಲ್ ಅಹ್ಮದ್ ಮುಂತಾದವರು ಧರಣಿಯಲ್ಲಿ ಭಾಗವಹಿಸಿದ್ದರು.
Comments are closed.