ಆರೋಗ್ಯ

ಕೋವಿಡ್’ನಿಂದ ಮೃತಪಟ್ಟ ಬಿಪಿಎಲ್ ಕಾರ್ಡುದಾರ ದುಡಿಯುವ ವ್ಯಕ್ತಿಯ ಕುಟುಂಬಕ್ಕೆ 1 ಲಕ್ಷ ಪರಿಹಾರ: ಸಿಎಂ ಬಿ.ಎಸ್ ಯಡಿಯೂರಪ್ಪ

Pinterest LinkedIn Tumblr

ಬೆಂಗಳೂರು: ಕೋವಿಡ್-19 ನಿಂದ ಕುಟುಂಬದ ದುಡಿಯುವ ವ್ಯಕ್ತಿ ಮೃತಪಟ್ಟ ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರವನ್ನು ನೀಡುವ ಮಹತ್ವದ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದೆ.

ಈ ಬಗ್ಗೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರವಾಗಿ ಸರ್ಕಾರ 250ರಿಂದ 300 ಕೋಟಿ ರೂಪಾಯಿ ಪ್ಯಾಕೇಜ್ ನೀಡಲಿದೆ. ದೇಶದಲ್ಲಿಯೇ ನಮ್ಮ ಸರ್ಕಾರ ಮೊದಲ ಬಾರಿಗೆ ಈ ಪರಿಹಾರ ಘೋಷಣೆ ಮಾಡುತ್ತಿದೆ ಎಂದರು.

ಕೋವಿಡ್-19 ಸೋಂಕಿನಿಂದ ಮೃತಪಟ್ಟು ಹಲವಾರು ಕುಟುಂಬಗಳು ಇಂದು ಬೀದಿಪಾಲಾಗಿವೆ. ಇದನ್ನು ಮನಗಂಡಿರುವ ಸರ್ಕಾರ, ಒಂದು ಕುಟುಂಬದಲ್ಲಿನ ವಯಸ್ಕರು, ದುಡಿಯುವ ಕೈ ಕೋವಿಡ್ ಸೋಂಕಿಗೆ ಮೃತಪಟ್ಟರೆ ಅಂತಹ ಕುಟುಂಬಕ್ಕೆ ಸರ್ಕಾರ ಒಂದು ಲಕ್ಷ ರೂಪಾಯಿ ಆರ್ಥಿಕ ಸಹಾಯ ನೀಡಲಿದೆ. ಇದು ಬಿಪಿಎಲ್ ಕಾರ್ಡು ಹೊಂದಿರುವವರಿಗೆ ಮಾತ್ರ ಅನ್ವಯವಾಗಲಿದೆ, ರಾಜ್ಯದಲ್ಲಿ 25ರಿಂದ 30 ಸಾವಿರ ಇಂತಹ ಕುಟುಂಬಗಳಿವೆ ಎಂದರು.

ದೇಶದಲ್ಲಿಯೇ ಕರ್ನಾಟಕ ಸರ್ಕಾರ ಈ ರೀತಿಯ ಕೋವಿಡ್-19 ಆರ್ಥಿಕ ಪ್ಯಾಕೇಜ್ ನೀಡುತ್ತಿದೆ ಎಂದರೆ ಸರ್ಕಾರದ ಆರ್ಥಿಕ ಪರಿಸ್ಥಿತಿ ಸಾಧಾರಣ ಮಟ್ಟಿಗೆ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

Comments are closed.