ಆರೋಗ್ಯ

ಕೊಲ್ಲೂರು, ಮುದೂರು ವ್ಯಾಪ್ತಿಯಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ; ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕರ್ತವ್ಯ ನಿರ್ವಹಣೆ..!

Pinterest LinkedIn Tumblr

ಕುಂದಾಪುರ: ಬೈಂದೂರು ತಾಲೂಕು ವ್ಯಾಪ್ತಿಯ ಕೊಲ್ಲೂರು, ಮುದೂರು, ಜಡ್ಕಲ್ ಪ್ರದೇಶಗಳ ಸಾರ್ವಜನಿಕರಲ್ಲಿ ನಿರಂತರವಾಗಿ ಕಂಡು ಬರುತ್ತಿರುವ ಡೆಂಗ್ಯೂ ಜ್ವರದ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ವತಿಯಿಂದ ಸಮರೋಪಾದಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಕರಣಗಳ ಸಂಖ್ಯೆಯನ್ನು ಶೂನ್ಯಕ್ಕಿಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು, ವೈದ್ಯರು, ಶುಶ್ರೂಷಕಿಯರು,ಆಶಾ ಕಾರ್ಯಕರ್ತೆಯರು ಸೇರಿದಂತೆ ಅರೋಗ್ಯ ಇಲಾಖೆಯ ಅವಿರತವಾಗಿ ಶ್ರಮಿಸುತ್ತಿದ್ದಾರೆ.

2022 ರ ಮಾರ್ಚ್ ನಿಂದ ಈ ಭಾಗದಲ್ಲಿ ಡೆಂಗ್ಯೂ ಪೀಡಿತರ ಸಂಖ್ಯೆ ಅಧಿಕವಾಗುತಿದ್ದು, ಜನವರಿಯಿಂದ ಇದುವರೆಗೂ ಜಿಲ್ಲೆಯಲ್ಲಿ 160 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು,ಅದರಲ್ಲಿ 120 ಕ್ಕೂ ಹೆಚ್ಚು ಈ ವ್ಯಾಪ್ತಿಯಲ್ಲಿಯೇ ಇದೆ. ಈಗಾಗಲೇ ಡೆಂಗ್ಯೂ ಪೀಡಿತರಿಗಾಗಿ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ 60 ಹಾಸಿಗೆಗಳ ವಿಸೇಷ ವಾರ್ಡ್ ಸಿದ್ದಪಡಿಸಿದ್ದು, ಇವುಗಳಲ್ಲಿ 25 ಪುರುಷ,25 ಮಹಿಳೆ ಮತ್ತು 10 ಬೆಡ್ ಗಳನ್ನು ಮಕ್ಕಳಿಗೆ ಮೀಸಲಿಟ್ಟಿದೆ.

ಹೆಚ್ಚಿನ ಪ್ರಕರಣಗಳು ವರಿಯಾಗುತ್ತಿರುವ ಮುದೂರು ಮತ್ತು ಜಡ್ಕಲ್ ನಲ್ಲಿ ನಿರಂತರ ನಿಗಾವಹಿಸಲು ಆರೋಗ್ಯಾಧಿಕಾರಿಗಳನ್ನು ಒಳಗೊಂಡ 13 ತಂಡಗಳನ್ನು ರಚಿಸಿದ್ದು, ಈ ತಂಡದ ಸದಸ್ಯರು ಪ್ರತಿದಿನ ಮನೆಮನೆಗೆ ತೆರಳಿ ಡೆಂಗ್ಯೂ ಕುರಿತು ಅರಿವು ಮೂಡಿಸುವುದರ ಜೊತೆಗೆ ಮನೆಯ ಸುತ್ತಮುತ್ತಲಿನ ಸ್ವಚ್ಛತೆ ಬಗ್ಗೆ ಪರಿಶೀಲಿಸಿ, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡಲಾಗುತ್ತಿದೆ. ಈ ಎರಡೂ ಗ್ರಾಮಗಳ ಮನೆಗಳಿಗೆ ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಉಚಿತವಾಗಿ ಸೊಳ್ಳೆ ಪರದೆಗಳನ್ನು ಸರಬರಾಜು ಮಾಡಲಾಗಿದ್ದು, ಎಲ್ಲಾ ಮನೆಗಳಿಗೆ ತಲಾ 2 ಬಾಟೆಲ್ ಡಿಎಂಪಿ ತೈಲವನ್ನು ವಿತರಿಸಲಾಗಿದೆ.

ಡೆಂಗ್ಯೂ ಪೀಡಿತರನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ತುರ್ತು ಅಗತ್ಯಕ್ಕಾಗಿ 2 ಅಂಬುಲೈನ್ಸ್ ಗಳನ್ನು ನಿಯೋಜಿಸಲಾಗಿದ್ದು, ಗ್ರಾಮದಲ್ಲಿ ಪ್ರತಿದಿನ ಫಾಗಿಂಗ್ ಮಾಡಲಾಗುತ್ತಿದೆ ಅಲ್ಲದೇ ಗ್ರಾಮಗಳ ವ್ಯಾಪ್ತಿಯಲ್ಲಿ ಬೀದಿ ನಾಟಕ, ಸಾಕ್ಷ್ಯ ಚಿತ್ರ ಪ್ರದರ್ಶನಗಳ ಮೂಲಕ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಡೆಂಗ್ಯೂ ನಿಯಂತ್ರಣ ಕುರಿತು ಮಾಹಿತಿ ನೀಡಿ, ಇದನ್ನು ಮನೆಗಳಲ್ಲಿ ಪೋಷಕರ ಮೂಲಕ ಅನುಷ್ಠಾನ ಮಾಡುವ ಬಗ್ಗೆ ಸಹ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ ಈ ವ್ಯಾಪ್ತಿಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮತ್ತು ಚರ್ಚ್ ಗಳಲ್ಲಿನ ವಾರದ ಪ್ರಾರ್ಥನೆ ಸಮಯದಲ್ಲಿ ಸಹ ಸಾರ್ವಜನಿಕರಿಗೆ ಅರಿವು ಮೂಡಿಸಲಾಗಿದೆ.

ಆರೋಗ್ಯ ಇಲಾಖೆ ಪ್ರಕಾರ ಈ ಪ್ರದೇಶದಲ್ಲಿ ರಬ್ಬರು ಮತ್ತು ಅನಾನಸು ಗಿಡಗಳು ಅಧಿಕವಾಗಿದ್ದು, ರಬ್ಬರ್ ಪ್ಲಾಂಟೇಷನ್ ಗಳಲ್ಲಿ ರಬ್ಬರ್ ಹಾಲಿನ ಸಂಗ್ರಹಕ್ಕೆ ಇಟ್ಟಿರುವ ಗೆರಟೆಗಳಲ್ಲಿ ಸಂಗ್ರಹವಾಗುವ ಮಳೆ ನೀರಿನಲ್ಲಿ ಸೊಳ್ಳೆಯ ಲಾರ್ವಾ ಹುಟ್ಟುತ್ತಿದ್ದು, ಇದು ಡೆಂಗ್ಯೂ ಸೊಳ್ಳೆ ಏಡಿಸ್ ನ ಉಗಮಕ್ಕೆ ಕಾರಣ ಎನ್ನಲಾಗುತ್ತಿದೆ, ಇದರೊಂದಿಗೆ ಅನಾನಸ್ ಗಿಡದ ಎಲೆಗಳ ನಡುವೆ ನಿಂತ ನೀರಿನಲ್ಲೂ ಮತ್ತು ಅಡಿಕೆ ತೋಟದ ಅಡಿಕೆ ಹಾಳೆಗಳಲ್ಲೂ ಡೆಂಗ್ಯೂ ಹರಡುವ ಸೊಳ್ಳೆಗಳು ಉಗಮವಾಗುತ್ತಿದ್ದು, ಈ ಬಗ್ಗೆ ತೋಟಗಳ ಮಾಲೀಕರಿಗೆ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳ ಮೂಲಕ ಅರಿವು ಮೂಡಿಸಲಾಗಿದೆ.

ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. , ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು, ಸಂಬಂದಪಟ್ಟ ಗ್ರಾಮ ಪಂಚಾಯತ್ ಗಳ ಅಧ್ಯಕ್ಷರು ಸೇರಿದಂತೆ ಎಲ್ಲಾ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ , ಈ ಗ್ರಾಮಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ನಿಯಂತ್ರಣಾ ಕ್ರಮಗಳ ಬಗ್ಗೆ ನಿರ್ದೇಶನಗಳನ್ನು ಸಹ ನೀಡಿದ್ದು, ಸದರಿ ನಿರ್ದೇಶನಗಳ ಪಾಲನೆ ಹಾಗೂ ಪ್ರತಿ ದಿನ ಇಲ್ಲಿನ ಪರಿಸ್ಥಿತಿಯ ಬಗ್ಗೆ ವರದಿ ಪಡೆಯುತ್ತಿದ್ದಾರೆ. ಜಿಲ್ಲಾಡಳಿತದ ವತಿಯಿಂದ ಡೆಂಗ್ಯೂ ನಿಯಂತ್ರಣಕ್ಕೆ ನೀಡಿರುವ ಎಲ್ಲಾ ರೀತಿಯ ನೆರವು ಹಾಗೂ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಒದಗಿಸಲಾಗಿದ್ದು, ಆರೋಗ್ಯ ಇಲಾಖೆವತಿಯಿಂದ ಜಿಲ್ಲಾಡಳಿತ ನೀಡಿರುವ ಎಲ್ಲಾ ನಿರ್ದೇಶನಗಳನ್ನು ಅನುಷ್ಠಾನ ಮಾಡಲಾಗುತ್ತಿದೆ. ಈ ಪ್ರದೇಶದಿಂದ ಡೆಂಗ್ಯೂ ವನ್ನು ನಿರ್ಮೂಲನೆ ಮಾಡಲು ಆರೋಗ್ಯ ಇಲಾಖೆಯು ಸಹ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಕರಣಗಳು ಹೆಚ್ಚದಂತೆ ನಿರಂತರವಾಗಿ ನಿಗಾವಹಿಸಲಾಗಿದೆ.

ಪ್ರಸ್ತುತ ಎಲ್ಲಡೆ ಮಳೆ ಅಧಿಕವಾಗುತ್ತಿದ್ದು, ಈ ಪ್ರದೇಶಗಳ ಸಾರ್ವಜನಿಕರು ತಮ್ಮ ಆರೋಗ್ಯದ ಹೆಚ್ಚಿನ ಕಾಳಜಿ ವಹಿಸಬೇಕು, ಯಾವುದೇ ಜ್ವರ ಬಂದರೂ ನಿರ್ಲಕ್ಷವಹಿಸದೇ, ಮುದೂರು ಉಪ ಆರೋಗ್ಯ ಕೇಂದ್ರ, ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಹಳ್ಳಿಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಗಾಗಲೇ ತೆರೆದಿರುವ ಫೀವರ್ ಕ್ಲೀನಿಕ್ ನಲ್ಲಿ ಪರೀಕ್ಷಿಸಿಕೊಳ್ಳಬೇಕು. ಡೆಂಗ್ಯೂ ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ರೀತಿಯ ಔಷಧಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇದ್ದು, ಸಾರ್ವಜನಿಕರು ಭಯ ಪಡುವ ಅವಶ್ಯಕತೆಯಿಲ್ಲ. ಸಾರ್ವಜನಿಕರು ಮನೆಯಿಂದ ಹೊರ ಹೋಗುವಾಗ ಸೊಳ್ಳೆ ಕಡಿತದಿಂದ ಪಾರಾಗಲು ಸಂಪೂರ್ಣ ಮೈ ಮುಚ್ಚುವಂತಹ ಬಟ್ಟೆಗಳನ್ನು ಧರಿಸಬೇಕು, ಮನೆಯಲ್ಲಿ ಸೊಳ್ಳೆ ಪರದೆಗಳನ್ನು ಬಳಸಬೇಕು, ಮನೆಯ ಸಮೀಪದಲ್ಲಿ ತ್ಯಾಜ್ಯ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸುವುದರ ಸೊಳ್ಳೆಗಳ ಬೆಳವಣಿಗೆಗೆ ಅವಕಾಶ ನೀಡಬಾರದು. ಈ ಮೂಲಕ ಈ ಪ್ರದೇಶದಲ್ಲಿ ಡೆಂಗ್ಯೂ ನಿರ್ಮೂಲನೆಗೆ ಶ್ರಮಿಸುತ್ತಿರುವ ಆರೋಗ್ಯ ಇಲಾಖೆಗೆ ಅಗತ್ಯ ಸಹಕಾರ ನೀಡಬೇಕು.
– ಡಾ.ಪ್ರಶಾಂತ್ ಭಟ್, ಉಡುಪಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ

Comments are closed.