
ನವದೆಹಲಿ: ಉರಿ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ಸೇನೆ ಪಾಕಿಸ್ತಾನದ ವಿರುದ್ಧ ತಿರುಗಿಬಿದ್ದಿದ್ದು, ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿವೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಖಾಸಗಿ ಸುದ್ದಿಮಾಧ್ಯಮವೊಂದು ವರದಿ ಮಾಡಿದ್ದು, ಜಮ್ಮು-ಕಾಶ್ಮೀರದ ಉರಿಯಲ್ಲಿ ಸೇನಾ ನೆಲೆ ಮೇಲೆ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನಾಪಡೆಗಳು ಗಡಿ ದಾಟಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ 3 ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿವೆ ಎಂದು ಹೇಳಿದೆ. ಸೇನೆಯ ಎರಡು ತುಕಡಿಗಳ ಸುಮಾರು 18 ರಿಂದ 20 ಯೋಧರ ತಂಡ ಈ ದಾಳಿ ನಡೆಸಿದ್ದು, ದಾಳಿ ವೇಳೆ ಉಗ್ರರ ಮೂರು ನೆಲಗಳನ್ನು ನಾಶಪಡಿಸಿವೆ ಎಂದು ತಿಳಿದುಬಂದಿದೆ.
ಈ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು 20 ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಸುಮಾರು 200ಕ್ಕೂ ಹೆಚ್ಚು ಉಗ್ರರು ಗಾಯಗೊಂಡಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಈ ವಿಶೇಷ ಕಾರ್ಯಾಚರಣೆಯಲ್ಲಿ ಸೇನಾ ಹೆಲಿಕಾಪ್ಟರ್ ಗಳನ್ನು ಬಳಕೆ ಮಾಡಿಕೊಳ್ಳಲಾಗಿದ್ದು, ಸ್ವತಃ ಸೇನಾ ಮೂಲಗಳೇ ದಾಳಿಯನ್ನು ಖಚಿತಪಡಿಸಿವೆ ಎಂದು ವೆಬ್ ಸೈಟ್ ವರದಿ ಮಾಡಿದ್ದು, ಈ ದಾಳಿಯಿಂದಾಗಿಯೇ ಪಾಕಿಸ್ತಾನ ಈ ಭಾಗದಲ್ಲಿ ವಿಮಾನ ಹಾರಾಟ ರದ್ದುಗೊಳಿಸಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಆದರೆ ಈ ವರದಿ ಬಗ್ಗೆ ಭಾರತೀಯ ಸೇನೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಉರಿ ಉಗ್ರ ದಾಳಿ ಬಳಿಕ ಪಾಕ್ ವಿರುದ್ಧ ಆಕ್ರೋಶಗೊಂಡಿದ್ದ ಪ್ರಧಾನಿ ಮೋದಿ, ಪ್ರತಿದಾಳಿಗೆ ಭಾರತೀಯ ಸೇನೆಗೆ ಎಲ್ಲ ರೀತಿಯ ಸಹಕಾರ ನೀಡಿದ್ದು, ಈ ಹಿನ್ನೆಲೆಯಲ್ಲಿ ಸೇನೆ ಉಗ್ರರ ನೆಲೆಯ ಮೇಲೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ.
Comments are closed.