ಕರ್ನಾಟಕ

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ: ಸಚಿವ ಎಂ.ಬಿ ಪಾಟೀಲ್

Pinterest LinkedIn Tumblr

ಮೈಸೂರು: ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಬುಧವಾರ ಸುಪ್ರೀಂ ಕೋರ್ಟ್ ನೀಡಿದ ಆದೇಶ ರಾಜ್ಯದಲ್ಲಿ ಮತ್ತೆ ಆಕ್ರೋಶದ ಕಿಚ್ಚು ಹಚ್ಚುವಂತೆ ಮಾಡಿದೆ.

ಮೇಲ್ಮನವಿ ಅರ್ಜಿ ಇತ್ಯರ್ಥವಾಗುವವರೆಗೂ, ಅಂದರೆ ಫೆಬ್ರವರಿ7ರವರಗೆ ತಮಿಳುನಾಡಿಗೆ ನಿತ್ಯ ಎರಡು ಸಾವಿರ ಕ್ಯೂಸೆಕ್‌ ಕಾವೇರಿ ನೀರು ಹರಿಸುವುದನ್ನು ಮುಂದುವರಿಸುವಂತೆ ಸುಪ್ರೀಂ ಕೋರ್ಟ್‌ ಬುಧವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಆದರೆ ರಾಜ್ಯ ಸರ್ಕಾರ ನೀರು ಬಿಡದಿರಲು ತೀರ್ಮಾನಿಸಿದೆ.

ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದು, ಮಳೆಯಿಲ್ಲದ ಕಾರಣ ಜಲಾಶಯಗಳ ನೀರಿನ ಮಟ್ಟ ಕುಸಿದಿದೆ. ಹೀಗಾಗಿ ನೀರು ಬಿಡುವ ಸ್ಥಿತಿಯಲ್ಲಿ ರಾಜ್ಯ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಕಬಿನಿ ಮತ್ತು ಕೃಷ್ಣರಾಜಸಾಗರ ಜಲಾಶಯಗಳಲ್ಲಿ ಕೇವಲ 13 ಟಿಎಂಸಿ ಅಡಿ ನೀರಿದೆ. ಏಪ್ರಿಲ್ ಅಂತ್ಯದವರೆಗೂ ಬೆಂಗಳೂರು, ಮೈಸೂರು ನಗರಗಳಿಗೆ ಕುಡಿಯುವ ನೀರು ಪೂರೈಕೆಗೆ ಮಾತ್ರ ಸಾಕಾಗುತ್ತದೆ. ಜೊತೆಗೆ ಜಲಾಶಯದಲ್ಲಿರುವ ನೀರಿನಿಂದ ನಾಗರಹೊಳೆ, ಬಂಡೀಪುರ, ಮತ್ತು ವೈನಾಡು ಪ್ರದೇಶಗಳಲ್ಲಿರುವ ಸುಮಾರು 5 ಸಾವಿರ ಆನೆಗಳಿಗೆ ಕುಡಿಯುವ ನೀರು ಪೂರೈಸಬೇಕು ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೇ ಈ ವರ್ಷ ಎರಡು ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿ ಕರ್ನಾಟಕ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿರುವುದಾಗಿ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ರೈತ ಸಂಘಟನೆಗಳು ಸುಪ್ರೀಂಕೋರ್ಟ್ ನೀಡಿರುವ ಆದೇಶಕ್ಕೆ ವಿರೋಧ ವ್ಯಕ್ತ ಪಡಿಸಿದ್ದು, ರಾಜ್ಯ ತಮಿಳುನಾಡಿಗೆ ನೀರು ಹರಿಸಿದರೇ ಬೆಳೆದು ನಿಂತಿರುವ ಬೆಳಗಳು ಸಂಪೂರ್ಣ ಹಾಳಾಗುತ್ತವೆ ಎಂದು ಆತಂಕ ವ್ಯಕ್ತ ಪಡಿಸಿದ್ದಾರೆ.

ರೈತರ ಹಿತವನ್ನು ಕಡೆಗಣಿಸಿ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಿದರೇ ಪ್ರತಿಭಟನೆ ನಡೆಸುವುದಾಗಿ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ಎಚ್ಚರಿಸಿದ್ದಾರೆ. ಜಲಾಶಯದಲ್ಲಿರುವ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸಬೇಕು ಎಂದು ಆಗ್ರಹಿಸಿದ್ದಾರೆ.

Comments are closed.