
ಮೈಸೂರು: ಬಜರಂಗದಳದ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಹಿಂದೆ ಸ್ಥಳೀಯ ಬಿಜೆಪಿ ಕಾರ್ಪೋರೇಟರ್ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ ಅವರು, ದೀಪಕ್ ಹತ್ಯೆಗೆ ಬಿಜೆಪಿ ಕಾರ್ಪೋರೇಟರ್ ಸುಪಾರಿ ಕೊಟ್ಟಿದ್ದು ಈ ವಿಷಯ ಸರ್ಕಾರಕ್ಕೂ ತಿಳಿದಿದೆ. ಆದರೆ ಸತ್ಯ ಬಹಿರಂಗಪಡಿಸುತ್ತಿಲ್ಲ. ಈ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೊಂದಾಣಿಕೆ ಮಾಡಿದ್ದಾರಾ ಎಂಬ ಪ್ರಶ್ನೆ ಹುಟ್ಟುತ್ತದೆ ಎಂದು ಆರೋಪಿಸಿದ್ದಾರೆ.
ಯಾವುದೇ ಆಧಾರವಿಲ್ಲದೆ ನಾನು ಮಾತನಾಡುತ್ತಿಲ್ಲ. ಪ್ರಕರಣದ ತನಿಖೆಯ ಮಾಹಿತಿಯನ್ನು ಪಡೆದು ಹೇಳುತ್ತಿದ್ದೇನೆ. ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಸತ್ಯ ಹೇಳಿದ್ದಾರೆ. ಆದರೂ ಸರ್ಕಾರ ಮಾತ್ರ ಮೌನ ವಹಿಸಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ದೀಪಕ್ ರಾವ್ ಹತ್ಯೆ ಹಿಂದೆ ನನ್ನ ಕೈವಾಡವಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರದ್ದು ಆಧಾರ ರಹಿತ ಆರೋಪವಾಗಿದೆ ಎಂದು ಬಿಜೆಪಿ ಕಾರ್ಪೋರೇಟರ್ ತಿಲಕ್ ರಾಜ್ ಪ್ರತಿಕ್ರಿಯಿಸಿದ್ದಾರೆ.
Comments are closed.