ಮಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರಬಹುದು. ಆದರೆ ಯಾರು ಅಭ್ಯರ್ಥಿಯಾಗ ಬೇಕೆಂದು ಪಕ್ಷದ ಅಧ್ಯಕ್ಷರು ತೀರ್ಮಾನಿಸಿ ಅಂತಿಮವಾಗಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆದ್ದಾರೆ. ದಕ್ಷಿಣ ಕನ್ನಡ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಬಂಡಾಯದ ಧ್ವನಿ ಬಹಿರಂಗವಾಗಿ ಕೇಳಿ ಬರುತ್ತಿದ್ದರೂ ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ ಎಂದು ಕರಾವಳಿಯ ಚುನಾವಣಾ ಉಸ್ತುವಾರಿ, ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಮಂಗಳೂರಿನ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಮಂಗಳೂರಿಗೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ, ಅಭಿವೃದ್ಧಿ ಕುಂಠಿತ ಪ್ರಮುಖ ಚುನಾವಣಾ ವಿಚಾರಗಳಾಗಿದ್ದು, ಇದನ್ನೇ ಪ್ರಚಾರ ವಿಷಯಗಳನ್ನಾಗಿ ಕೈಗೆತ್ತಿಕೊಂಡಿದ್ದೇವೆ. ಕೇಂದ್ರ ಸರಕಾರ ಜಾರಿ ಮಾಡಿದ ಜಿಎಸ್ಟಿ ಮತ್ತು ನೋಟು ಅಮಾನ್ಯೀಕರಣದ ಪರಿಣಾಮಗಳು ಈ ಬಾರಿ ಚುನಾವಣೆ ವಿಷಯ ಆಗುವುದಿಲ್ಲ. ಉತ್ತರ ಪ್ರದೇಶ, ತ್ರಿಪುರ ಚುನಾವಣೆಗಳಲ್ಲೂ ಇದು ಸಾಬೀತಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿ ಈಗಾಗಲೇ ಪ್ರಚಾರದಲ್ಲಿ ನಿರತರಾಗಿದ್ದು, ನಾಮಪತ್ರದ ಪ್ರಕ್ರಿಯೆಗಳೆಲ್ಲ ಮುಗಿದ ಬಳಿಕ ಎ.೨೮ರಿಂದ ಅಂತಿಮ ಹಂತದ ಪ್ರಚಾರ ಕಾರ್ಯ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಿದ್ದೇವೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಉತ್ತರ ಪ್ರದೇಶ ಸಚಿವ ಮಹೇಂದ್ರ ಸಿಂಗ್, ಸಂಸದ ನಳಿನ್ ಕುಮಾರ್ ಕಟೀಲು, ಪಕ್ಷದ ಪ್ರಮುಖರಾದ ಮೋನಪ್ಪ ಭಂಡಾರಿ, ಗಣೇಶ್ ಕಾರ್ಣಿಕ್, ಕ್ಯಾ. ಬ್ರಿಜೇಶ್ ಚೌಟ, ಸುಲೋಚನಾ ಜಿ.ಕೆ. ಭಟ್, ಸುದರ್ಶನ್ ಮೂಡುಬಿದಿರೆ, ರವಿಶಂಕರ್ ಮಿಜಾರ್, ಕಿಶೋರ್ ರೈ, ರಾಜೇಶ್ ಕೊಟ್ಟಾರಿ, ಸಂಜಯ್ ಪ್ರಭು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Comments are closed.