
ಮಂಗಳೂರು, ಜು.1 : ನಗರದ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಕಳೆದೊಂದು ವಾರದಿಂದ ನಡೆಯುತ್ತಿರುವ ಸ್ಕಾರ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ದ.ಕ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿನ್ನೆ ನಡೆದ ಸಭೆಯೊಂದರ ಬಳಿಕ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು. ಸೈಂಟ್ ಆಗ್ನೆಸ್ ಕಾಲೇಜು ದೇಶ ಮಾತ್ರವಲ್ಲ ಅಂತಾರಾಷ್ಟ್ರೀಯ ಮಟ್ಟದಲ್ಲೂ ಹೆಸರುಗಳಿಸಿದ ಶಿಕ್ಷಣ ಸಂಸ್ಥೆಯಾಗಿದೆ. ಸ್ಕಾರ್ಫ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜಿಗೆ ಸಂಬಂಧಪಡದ ಹೊರಗಿನ ಸಂಘಟನೆಗಳು ಮಧ್ಯಪ್ರವೇಶಿಸುವ ಅಗತ್ಯವಿಲ್ಲ. ಆ ಸಂಸ್ಥೆಗೆ ಕಳಂಕ ತರುವ ಅಗತ್ಯವೂ ಇಲ್ಲ. ಅದನ್ನು ಕಾಲೇಜಿನ ಆಡಳಿತ ಮಂಡಳಿ, ವಿದ್ಯಾರ್ಥಿನಿಯರು ಮತ್ತು ಹೆತ್ತವರು ಬಗೆಹರಿಸಬೇಕಿದೆ ಎಂದು ಖಾದರ್ ತಿಳಿಸಿದರು.

ಇದೊಂದು ಸೂಕ್ಷ್ಮ ವಿಚಾರವಾಗಿದೆ. ವಿವಾದ ಭುಗಿಲೇಳುವ ಮುನ್ನ ಸಂಬಂಧಪಟ್ಟವರನ್ನು ಕರೆಸಿ ಸೂಕ್ತ ರೀತಿಯಲ್ಲಿ ಮಾತುಕತೆ ನಡೆಸಲು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದೇನೆ. ಆ ಸಭೆಯಲ್ಲಿ ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ತಾನು ಮಧ್ಯಪ್ರವೇಶಿಸುವುದಾಗಿ ಸುದ್ದಿಗಾರರ ಪ್ರಶ್ನೆಗೆ ಸಚಿವ ಖಾದರ್ ಉತ್ತರಿಸಿದರು.
ಈ ವಿಚಾರದಲ್ಲಿ ಮಧ್ಯಪ್ರವೇಶಿಸಿದ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೋ ಬೇಡವೋ ಎಂಬುದನ್ನು ಜಿಲ್ಲಾಡಳಿತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಚಿವ ಖಾದರ್ ಹೇಳಿದರು.
Comments are closed.