ಕರಾವಳಿ

ಅಭಿವೃದ್ಧಿ ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಕ್ಕೆ ತನ್ನಿ : ಸಚಿವ ಪುಟ್ಟರಾಜು

Pinterest LinkedIn Tumblr

ಮಂಗಳೂರು ಸೆಪ್ಟಂಬರ್ 15 : ಸಣ್ಣ ನೀರಾವರಿ ಯೋಜನೆಯಡಿ ರೂಪಿಸಲಾದ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಕ್ಕೆ ತನ್ನಿ ಎಂದು ರಾಜ್ಯದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖಾ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದರು.

ಶಾಸಕರ ಸಲಹೆಗಳನ್ನು ಪಡೆದು ಜನೋಪಯೋಗಿ ಕಾರ್ಯಕ್ರಮ ರೂಪಿಸಲು ಈಗಾಗಲೇ ಮಾನ್ಯ ಮುಖ್ಯಂತ್ರಿಗಳು ಸೂಚನೆ ನೀಡಿದ್ದಾರೆ. ಈ ಸೂಚನೆಯನ್ನು ಪಾಲಿಸಲಾಗುವುದು ಎಂದ ಅವರು, ಅಂತರ್ಜಲ ವೃದ್ಧಿ ಮತ್ತು ಕೃಷಿಗೆ ಪೂರಕ ಯೋಜನೆಗಳು ಅಗತ್ಯವಿದೆ ಎಂದರು.

ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರುಗಿದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ನಗರಾಭಿವೃದ್ದಿ ಮತ್ತು ವಸತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿರುವಂತೆ ಪಡೀಲ್ ಮತ್ತು ಜಪ್ಪಿನಮೊಗರು ನಡುವೆ ನೇತ್ರಾವತಿ ನದಿಗೆ ಉಪ್ಪು ನೀರು ತಡೆ ಕಿಂಡಿ ಅಣೆಕಟ್ಟು ನಿರ್ಮಿಸಲು ಅಂದಾಜಿಸಲಾಗಿದ್ದು ಇದರ ತಾಂತ್ರಿಕ ಶಕ್ಯತೆ ಬಗ್ಗೆ ಪರಿಣಿತರನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳಲಾಗುವುದು. ಎಂದರು.

ಜಿಲ್ಲೆಯಲ್ಲಿ ಒಟ್ಟು 291 ಕಿಂಡಿ ಅಣೆಕಟ್ಟುಗಳಿವೆ. ಪಶ್ಚಿಮವಾಹಿನಿ ಯೋಜನೆಯು ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳಿಗೆ ಸರಣಿ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಿ ಗರಿಷ್ಟ ಪ್ರಮಾಣದಲ್ಲಿ ನೀರನ್ನು ಬಳಸಿಕೊಂಡು ಕೃಷಿಗೆ ನೀರಾವರಿ ಸೌಲಭ್ಯ, ಕುಡಿಯುವ ನೀರಿನ ನಿರಂತರ ಪೂರೈಕೆಗಾಗಿ ಅಣೆಕಟ್ಟು ನಿರ್ಮಾಣ ಕಾಮಗಾರಿಗಾಗಿ ರೂ. 174 ಕೋಟಿ ಅಂದಾಜು ಮೊತ್ತದಲ್ಲಿ ಯೋಜನೆ ಅನುಮೋದನೆ ಗೊಂಡಿರುತ್ತದೆ. ಒಟ್ಟು 760 ಯೋಜನೆಗಳಿಗೆ ರೂ 1598 ಕೋಟಿ ಅನುದಾನದ ಅವಶ್ಯಕತೆ ಇದ್ದು ಇವುಗಳನ್ನು 3 ಹಂತಗಳಲ್ಲಿ ಕೈಗೊಳ್ಳಲು ಪ್ರಸ್ತಾಪಿಸಲಾಗಿದೆ. ಎಂದು ಮಂಗಳೂರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಗೋಕುಲ್ ದಾಸ್ ಸಚಿವರ ಗಮನ ಸೆಳೆದರು.

ಸಣ್ಣ ನೀರಾವರಿ ಇಲಾಖೆಯಿಂದ ಕೈಗೊಂಡ ಕಿಂಡಿ ಅಣೆಕಟ್ಟೆಗಳಿಗೆ ಹಲಗೆಗಳ ಸಮಸ್ಯೆ ಇರುವುದಿಲ್ಲ. ನೂತನ ಮಾದರಿ ಹಲಗೆಗಳನ್ನೇ ಅಳವಡಿಸಲಾಗಿದೆ ಎಂದರು.

ಸಭೆಯಲ್ಲಿ ನಗರಾಭಿವೃದ್ದಿ ಮತ್ತು ವಸತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್, ಶಾಸಕರಾದ ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ಸಂಜೀವ ಮಠಂದೂರು, ಉಮಾನಾಥ ಕೋಟ್ಯಾನ್, ಐವನ್ ಡಿಸೋಜ, ಅಪರ ಜಿಲ್ಲಾಧಿಕಾರಿ ಕುಮಾರ್ , ರಾಜ್ಯದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖಾ ಕಾರ್ಯದರ್ಶಿ ಹಾಗೂ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Comments are closed.