ಕರಾವಳಿ

ತೋಟ ಬೆಂಗ್ರೆ ಸಾಮೂಹಿಕ ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ವಿದ್ಯಾರ್ಥಿಗಳ ಆಗ್ರಹ

Pinterest LinkedIn Tumblr

ಮಂಗಳೂರು, ನವೆಂಬರ್.30: ತೋಟ ಬೆಂಗ್ರೆಯಲ್ಲಿ ಇತ್ತೀಚೆಗೆ ವಿಹಾರಕ್ಕೆ ಬಂದಿದ್ದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರವನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿರುವ ಎಸ್‌ಡಿಎಂ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಹ್ರಹಿಸಿ ಶುಕ್ರವಾರ ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದರು.

ತಡವಾಗಿ ಬೆಳಕಿಗೆ ಬಂದ ಪ್ರಕರಣವನ್ನು ಬೇಧಿಸಿದ ಪೊಲೀಸರು ಈಗಾಗಲೇ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿರುವುದು ಸ್ವಾಗತಾರ್ಹ. ಇದರ ಜತೆ ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿ ಗಳನ್ನು ಶೀಘ್ರವಾಗಿ ಬಂಧಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ವಿದ್ಯಾರ್ಥಿ ನಾಯಕ ಜಿತಿನ್ ಮಾತನಾಡಿ, ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಶೀಘ್ರ ಬಂಧಿಸಬೇಕು. ತೋಟಬೆಂಗ್ರೆ ಪರಿಸರದಲ್ಲಿ ಪ್ರವಾಸಿಗರಿಗೆ ವಿಶೇಷ ಪೊಲೀಸ್ ಭದ್ರತೆ ಒದಗಿಸ ಬೇಕು. ಪ್ರದೇಶದಲ್ಲಿ ಮಾದಕ ವ್ಯಸನ ಜಾಲ ಸಕ್ರಿಯವಾಗಿದ್ದು, ಅದರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮರಾ ಆಳವಡಿಸಬೇಕು. ತೋಟ ಬೆಂಗ್ರೆಯಂತಹ ಪ್ರದೇಶಗಳಲ್ಲಿ ಪೊಲೀಸರು ಭದ್ರತೆಯನ್ನು ಒದಗಿಸುವ ಮೂಲಕ ಪ್ರವಾಸಿಗರಿಗೆ, ಅಲ್ಲಿಗೆ ವಿಹಾರಕ್ಕೆ ಬರುವವರಿಗೆ ತೊಂದರೆ ಆಗದಂತೆ ಖಾತರಿಪಡಿಸಬೇಕು ಎಂದು ಹೇಳಿದರು.

ಮಹಿಳೆಯರು ಇಂದು ಸುರಕ್ಷತೆಯ ಬಗ್ಗೆ ಆತಂಕ ಪಡುವಂತಾಗಿದೆ. ಮನೆಯಿಂದ ಹೊರ ಹೋದವರು ಸುರಕ್ಷಿತವಾಗಿ ಮನೆ ತಲುಪುವ ವಿಶ್ವಾಸ ಇಲ್ಲವಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯ ನೀಡುವ ಮೂಲಕ ಇಂತಹ ಕೃತ್ಯ ಎಸಗಲು ಮುಂದಾಗುವವರಿಗೆ ಎಚ್ಚರಿಕೆ ನೀಡಬೇಕು ಎಂದು ವಿದ್ಯಾರ್ಥಿನಿ ಮುಫೀದಾ ಒತ್ತಾಯಿಸಿದರು. ಬಳಿಕ ವಿದ್ಯಾರ್ಥಿಗಳ ತಂಡ ಪೊಲೀಸ್ ಅಯುಕ್ತರ ಕಚೇರಿಗೆ ತೆರಳಿ ಈ ಬಗ್ಗೆ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿತು.

Comments are closed.