ಕರಾವಳಿ

ಮಂಗಳೂರು : ಬೃಹತ್ ಸಾಂಸ್ಕೃತಿಕ ಮೆರವಣಿಗೆ – ದಿಬ್ಬಣದೊಂದಿಗೆ ನಾಳೆ ಕರಾವಳಿ ಉತ್ಸವಕ್ಕೆ ಚಾಲನೆ

Pinterest LinkedIn Tumblr

ಮಂಗಳೂರು ಡಿಸೆಂಬರ್ 20 : ಕರಾವಳಿ ಉತ್ಸವ ಕಾರ್ಯಕ್ರಮಗಳಿಗೆ ಶುಕ್ರವಾರ ಚಾಲನೆ ದೊರಕಲಿದೆ. ಉದ್ಘಾಟನೆ ಪ್ರಯುಕ್ತ ಶುಕ್ರವಾರ ಅಪರಾಹ್ನ 3.30ಕ್ಕೆ ಮಂಗಳೂರು ನೆಹರೂ ಮೈದಾನದಿಂದ ಕರಾವಳಿ ಉತ್ಸವ ಮೈದಾನದವರೆಗೆ ಬೃಹತ್ ಸಾಂಸ್ಕೃತಿಕ ಮೆರವಣಿಗೆ ಸಾಗಲಿದೆ.

ನಗರಾಭಿವೃದ್ಧಿ ಮತ್ತು ವಸತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಮೆರವಣಿಗೆ ಉದ್ಘಾಟಿಸಲಿರುವರು. ಅಪರಾಹ್ನ 3.30ಕ್ಕೆ ಮಂಗಳೂರು ನೆಹರೂ ಮೈದಾನದಿಂದ ಹೊರಡುವ ಮೆರವಣಿಗೆಯು ಎ.ಬಿ ಶೆಟ್ಟಿ ಸರ್ಕಲ್, ನೆಹರು ಮೈದಾನ ರಸ್ತೆ, ಗಡಿಯಾರ ಗೋಪುರ, ಯು.ಪಿ. ಮಲ್ಯ ರಸ್ತೆ, ಹಂಪನ್ ಕಟ್ಟೆ ವೃತ್ತ, ಕೆ.ಎಸ್. ರಾವ್ ರೋಡ್, ನವಭಾರತ ಸರ್ಕಲ್, ಪಿ.ವಿ.ಎಸ್. ಜಂಕ್ಷನ್, ಮಹಾತ್ಮಾ ಗಾಂಧಿ ರಸ್ತೆ, ಬಳ್ಳಾಲ್‍ಬಾಗ್, ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ, ಲಾಲ್‍ಭಾಗ್, ಕರಾವಳಿ ಉತ್ಸವ ಮೈದಾನದಲ್ಲಿ ಸಂಪನ್ನಗೊಳ್ಳಲಿದೆ.

ವಿವಿಧ ದೇವಾಲಯಗಳ ಸಹಭಾಗಿತ್ವದಲ್ಲಿ ಕರಾವಳಿಯ ಸಾಂಸ್ಕೃತಿಕ ಸಂಭ್ರಮದೊಂದಿಗೆ ವೈವಿಧ್ಯಮಯವಾದ ಸಾಂಸ್ಕೃತಿಕ ಮೆರವಣಿಗೆಯು ಸಾಗಿ ಬರಲಿದ್ದು, ರಾಜ್ಯದ ವಿವಿಧ ಕಲಾತಂಡಗಳ ಪ್ರದರ್ಶನಗಳು, ನೃತ್ಯಗಳು, ಚೆಂಡೆ, ಡೋಲು ಇತ್ಯಾದಿಗಳನ್ನೊಳಗೊಂಡಿರುತ್ತವೆ.

ಸುಮಾರು 80ಕ್ಕೂ ಹೆಚ್ಚು ತಂಡಗಳು ವಿವಿಧ ಜಿಲ್ಲೆಗಳಿಂದ ಪಾಲ್ಗೊಳ್ಳತ್ತಲಿವೆ. ವಿಶೇಷವಾಗಿ ಮಹಿಳಾ ವೀರಗಾಸೆ, ಚಿಕ್ಕ ಮಂಗಳೂರು, ಶಿವಮೊಗ್ಗದ ಡೊಳ್ಳು ಕುಣಿತ, ಸಾಗರದ ಕೋಲಾಟ, ಹಾವೇರಿಯ ಪುರವಂತಿಕೆ, ಧಾರವಾಡದ ಜಗ್ಗಲಿಗೆ ಮೇಳ, ಮಾಗಡಿಯ ಪಟ್ಟದ ಕುಣಿತ, ತುಮಕೂರಿನ ಸೋಮನ ಕುಣಿತ, ರಾಮನಗರದ ಪೂಜಾ ಕುಣಿತ, ಮೈಸೂರಿನ ವೀರ ಭದ್ರ ಕುಣಿತ, ಹಾವೇರಿಯ ಬೇಡರ ಕುಣಿತ, ಕಾರವಾರದ ಸುಗ್ಗಿ ಕುಣಿತ, ಮೈಸೂರಿನ ಕಂಸಾಳೆ, ನಗಾರಿ ತಂಡ, ರಾಯಚೂರಿನ ಕಣಿವಾದನ, ಚಾಮರಾಜನಗರದ ಗೊರವರ ಕುಣಿತ, ಬೆಳಗಾವಿಯ ಲಂಬಾಣಿ ನೃತ್ಯ, ಹಾಸನದ ಚಿಟ್ಟಿಮೇಳ, ಬದಿಯಡ್ಕದ ತ್ರಯಂಬಕಂ, ಕಾಸರಗೋಡಿನ ದುಡಿಇನದನ, ಮಾರ್ಗಂಕಳಿ, ತಿರುವಾದಿರೆಕ್ಕಳಿ ಮಡಿಕೇರಿಯ ಕೊಡವ ನೃತ್ಯ ತಂಡಗಳಲ್ಲದೆ. ಕನ್ನಡ ಭುವನೇಶ್ವರಿಯ ಟ್ಯಾಬ್ಲೊ ಮೊದಲ್ಗೊಂಡು ತುಳುನಾಡಿನ ಜನಪದ ಕುಣಿತ, ಯಕ್ಷಗಾನ ವೇಷಗಳು, ಸೋಣ ಜೋಗಿ ಕುಣಿತ ಹುಲಿವೇಷ, ತಾಲೀಮು, ಶಂಖ ದಾಸರು, ಜಾನಪದ ಗೊಂಬೆ, ಕೊರಗರ ಗಜಮೇಳ, ಮರಕಾಲು ಹುಲಿ ವೇಷ, ದಪ್ಪು ಕುಣಿತ, ಕಂಗೀಲು ನೃತ್ಯ, ಇತ್ಯಾದಿ ಅನೇಕಾನೇಕ ತಂಡಗಳು ಭಾಗವಹಿಸಲಿದೆ.

ಬೆಡಿ ಗರ್ನಲ್, ಸಹಿತವಾಗಿ ವಿವಿಧ ದೇವಸ್ಥಾನಗಳಿಂದ ಸಾಂಪ್ರದಾಯಿಕ ವಾದನದೊಂದಿಗೆ ತಟ್ಟೀರಾಯ, ಬೇತಾಳ ಮೆರವಣಿಗೆಗೆ ಮೆರುಗು ನೀಡಲಿದೆ. ಅನೇಕ ವಿದ್ಯಾ ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳು, ಎನ್‍ಸಿಸಿ, ಸ್ಕೌಟ್ಸ್ ಗೈಡ್ಸ್ ಭಾರತ ಸೇವಾದಲ, ಬ್ಯಾಂಕ್, ಅಂಚೆ ಇತ್ಯಾದಿ ಸಂಸ್ಥೆಗಳೂ ಪಾಲ್ಗೊಳ್ಳಲಿವೆ.

ಕಾಲೇಜು ವಿದ್ಯಾರ್ಥಿಗಳನ್ನೊಳಗೊಂಡಂತೆ ಸುಮಾರು ಐದು ಸಾವಿರ ವಿದ್ಯಾರ್ಥಿಗಳು ವಿವಿಧ ಸಾಮಾಜಿಕ ಚಿಂತನೆಗಳ ಅಭಿವ್ಯಕ್ತ ಪ್ರದರ್ಶನದೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಶೇಷ ಪ್ರದರ್ಶನ :

ಕರಾವಳಿ ಉತ್ಸವ ವಸ್ತು ಪ್ರದರ್ಶನ ಮಂಟಪ ಹೊರ ಆವರಣದ ಮೈದಾನದಲ್ಲಿ ಸಂಜೆ 5.30 ರಿಂದ 7 ಗಂಟೆ ರವರೆಗೆ ರಾಜ್ಯದಾದ್ಯಂತದಿಂದ ಬಂದ ಕಲಾ ತಂಡಗಳು ವಿಶೇಷ ಪ್ರದರ್ಶನವನ್ನು ನೀಡಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ವೇದಿಕೆಯಲ್ಲಿ ಆಯ್ದ ತಂಡಗಳಿಂದ ವೈವಿಧ್ಯಮಯ ಕಾರ್ಯಕ್ರಮ ನಡೆಯಲಿದೆ.

ಮಂಗಳೂರು ತಹಶೀಲ್ದಾರ್ ಟಿ. ಜಿ. ಗುರುಪ್ರಸಾದ ಮತ್ತು ಮಂಗಳೂರು ತಾಲೂಕು ಕಚೇರಿಯ ಸಿಬ್ಬಂದಿವರ್ಗದ ರವಿ ಶೆಟ್ಟಿ ಮತ್ತು ತಂಡದವವರ ಮೇಲುಸ್ತುವಾರಿಯಲ್ಲಿ ಮೆರವಣಿಗೆ ಸಾಗಲಿದೆ.

ವಿಶೇಷ ವ್ಯವಸ್ಥೆ :

ಎಲ್ಲಾ ಮಕ್ಕಳಿಗೆ, ಮೆರವಣಿಗೆಯಲ್ಲಿ ಭಾಗವಹಿಸಿದ ಎಲ್ಲಾ ಬಂಧುಗಳಿಗೆ ಉಪ್ಪಿಟ್ಟು, ಅವಲಕ್ಕಿ, ಬಾದಾಮಿ ಹಾಲು, ಲಾಡು, ಕಿತ್ತಲೆ, ಕುಡಿಯುವ ನೀರು , ಉಪಹಾರದ ವ್ಯವಸ್ಥೆ ಮಾಡಲಾಗಿದ್ದು ಸಾರ್ವಜನಿಕರು ಅತ್ಯಧಿಕ ಸಂಖ್ಯೆಯಲ್ಲಿ ಈ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಕರಾವಳಿ ಉತ್ಸವ ಮೆರವಣಿಗೆಯ ಸಮಿತಿಯ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.