ಕರಾವಳಿ

ಕದ್ರಿ ಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ : ಗಮನ ಸೆಳೆದ “ಸಮುದ್ರದಲ್ಲಿ ತೇಲುವ ಬೃಹತ್ ಹೂವಿನ ಹಡಗು’’

Pinterest LinkedIn Tumblr

ಮಂಗಳೂರು ಜನವರಿ 26 : ತೋಟಗಾರಿಕೆ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಹಾಗೂ ಕದ್ರಿ ಉದ್ಯಾನವನ ಅಭಿವೃದ್ದಿ ಸಮಿತಿ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಸಿರಿ ತೋಟಗಾರಿಕೆ ಸಂಘ(ರಿ) ಮಂಗಳೂರು ಮತ್ತು ಇತರೆ ಅಭಿವೃದ್ದಿ ಇಲಾಖೆಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ಶನಿವಾರ ನಗರಾಭಿವೃದ್ದಿ ಸಚಿವ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಯು.ಟಿ. ಖಾದರ್ ಉದ್ಘಾಟಿಸಿದರು.

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ. ಸೆಲ್ವಮಣಿ, ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಸ್ಥಳೀಯ ಕಾರ್ಪೊರೇಟರ್ ರೂಪ.ಡಿ.ಬಂಗೇರ, ಜಿಲ್ಲಾ ಪಂಚಾಯಾತ್ ಮಾಜಿ ಅಧ್ಯೆಕ್ಷೆ ಶ್ರೀಮತಿ ಮಮತಾ ಗಟ್ಟಿ ಹಾಗೂ ಮತ್ತಿತ್ತರ ಗಣ್ಯರು ಉಪಸ್ಥಿತರಿದ್ದರು.

ಹೂ ವಿನ್ಯಾಸ ಮಾದರಿ ಹಾಗೂ ಬಣ್ಣ ಬಣ್ಣದ ಕಾನೇರ್ಷನ್ ಮತ್ತು ಗುಲಾಬಿ ಹೂವಿನಿಂದ ಅಲಂಕರಿಸಿದ “ಸಮುದ್ರದಲ್ಲಿ ತೇಲುವ ಹಡಗು’’ ತೋಟಗಾರಿಕೆ ಇಲಾಖಾ ವತಿಯಿಂದ ಬೆಳೆಸಲಾಗಿರುವ ವಿವಿಧ ಜಾತಿಯ ಆಕರ್ಷಣೀಯವಾದ ಹೂಗಳ “ಟೋಪಿಯಾರಿ” ಹಾಗೂ ವಿವಿಧ ಹಣ್ಣು ಮತ್ತು ತರಕಾರಿಗಳ ಪ್ರದರ್ಶನ ಮತ್ತು ಇನ್ನಿತರ ಮಾದರಿಗಳು/ಆಕೃತಿಗಳು ಸಾರ್ವಜನಿಕರ ಗಮನ ಸೆಳೆದವು.

ತೋಟಗಾರಿಕೆ ಇಲಾಖೆಯು ಇತರೆ ಸರಕಾರಿ ಇಲಾಖೆಗಳು, ಬ್ಯಾಂಕ್‍ಗಳು, ಸಂಘಸಂಸ್ಥೆಗಳು ಮತ್ತು ಸಾರ್ವಜನಿಕರ ಸಹಭಾಗಿತ್ವ ಹಾಗೂ ಸಹಕಾರದಿಂದ ಈ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಿ ಜಿಲ್ಲೆಯಲ್ಲಿ ತೋಟಗಾರಿಕೆ ಚಟುವಟಿಕೆ ಹಾಗೂ ತೋಟಗಾರಿಕೆ ಕಲೆಯನ್ನು ಸಾರ್ವಜನಿಕರಲ್ಲಿ ಉದ್ದೀಪನಗೊಳಿಸುವ ಮೂಲಕ ಜಿಲ್ಲೆಯಲ್ಲಿ ತೋಟಗಾರಿಕೆಯಲ್ಲಿರುವ ಅವಕಾಶಗಳನ್ನು ಬಳಸಿಕೊಂಡು ಪರಿಸರ ಸಂರಕ್ಷಣೆ, ಸಾರ್ವಜನಿಕ ನೈರ್ಮಲ್ಯ, ಗ್ರಾಮ, ನಗರಗಳನ್ನು ಸುಂದರಗೊಳಿಸುವುದು, ಮೌಲ್ಯವರ್ಧನೆ ಇತ್ಯಾದಿ ಚಟುವಟಿಕೆಗಳನ್ನು ಪ್ರೋತ್ಸಾಹಿಸಿ ಚಾಲನೆ ನೀಡುವ ಮೂಲಕ ತೋಟಗಾರಿಕೆ ಉದ್ದಿಮೆಯನ್ನು ಮುಂದಕ್ಕೆ ಕೊಂಡೊಯ್ಯುವ ಉದ್ದೇಶವನ್ನು ಹೊಂದಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಅಂಥೂರಿಯಂ, ಆರ್ಕಿಡ್ ಗಿಡಗಳು ಇನ್ನಿತರೇ ಆಕರ್ಷಣೀಯವಾದ ಗಿಡಗಳ ಪ್ರದರ್ಶನ. ವಿವಿಧ ತಾಲ್ಲೂಕುಗಳಿಂದ ಹಾಗೂ ಇಲಾಖೆ ಕ್ಷೇತ್ರಗಳಲ್ಲಿ ಉತ್ಪಾದಿಸಿದ ತರಕಾರಿ ಸಸಿ ಹಾಗೂ ಹೂವಿನ ಗಿಡಗಳನ್ನು ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡುವ ವ್ಯವಸ್ಥೆ ಕೂಡ ಮಾಡಲಾಗಿದೆ ಜೊತೆಗೆ ವಿವಿಧ ನರ್ಸರಿದಾರರು, ಬೀಜ/ಗೊಬ್ಬರಗಳ ಮಾರಾಟಗಾರರು, ಯಂತ್ರಗಳ ಮಾರಾಟಗಾರರು ಮಳಿಗೆಗಳನ್ನು ತೆರೆಯಲಿದ್ದು, ಸಾವಯವ ಉತ್ಪನ್ನಗಳು, ತೋಟಗಾರಿಕೆ ಉತ್ಪನ್ನಗಳು, ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸುವ ಉದ್ದಿಮೆದಾರರಿಂದ ಸಾರ್ವಜನಿಕರು ತಮಗೆ ಅಗತ್ಯವಿರುವ ಉತ್ಪನ್ನಗಳ ಖರೀದಿ ಹಾಗೂ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಹನಿ ನೀರಾವರಿ ಪ್ರಾತ್ಯಕ್ಷತೆ, ಹೈಡ್ರೋಪೋನಿಕ್ಸ್, ಜೇನುಸಾಕಾಣಿಕೆ ಮಾದರಿ, ಅಣಬೆ ಮಾದರಿಗಳು ಹಾಗೂ ವಿವಿಧ ಕಟ್ ಪ್ಲವರ್‍ಗಳ ಜೋಡಣೆ. ಜೇನು ಬೇಸಾಯ ಬಗ್ಗೆ ಮಾಹಿತಿ ಹಾಗೂ ಜೇನಿನ ಮೌಲ್ಯವರ್ಧಿತ ಉತ್ಪನ್ನಗಳ ಮಾರಾಟ಼ಕ್ಕೂ ಅವಕಾಶ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ ದಿನಾಂಕ 28 ರವರೆಗೆ 3 ದಿನಗಳ ಕಾಲ ನಡೆಯಲಿದೆ. ಕೈತೋಟದ ಪ್ರಾತ್ಯಕ್ಷತೆ. ವಿವಿಧ ಅಭಿವೃದ್ದಿ ಇಲಾಖೆಗಳ ಪ್ರದರ್ಶನದ ಮಳಿಗೆಗಳು. ಫಲಪುಷ್ಪ ಪ್ರದರ್ಶನಕ್ಕೆ ಎಲ್ಲಾ ಶಾಲಾ ಮಕ್ಕಳಿಗೆ, ಅಂಗವಿಕಲರಿಗೆ ಮತ್ತು ಭಿನ್ನ ಸಾರ್ಮಥ್ಯದ ಮಕ್ಕಳಿಗೆ ಉಚಿತ ಪ್ರವೇಶದ ವ್ಯವಸ್ಥೆ ಮಾಡಲಾಗಿದೆ.

Comments are closed.