ಮಂಗಳೂರು: ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಯಂಡ್ ಇಂಡಸ್ಟ್ರಿ (ಬಿಸಿಸಿಐ) ವತಿಯಿಂದ ಫೆ.8ರಿಂದ 10ರವರೆಗೆ ‘ಬ್ಯಾರಿ ಮೇಳ- 2019’ ಸಮಾರಂಭವು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಫೆ.8ರಂದು ಸಂಜೆ 5 ಗಂಟೆಗೆ ಬ್ಯಾರಿ ಮೇಳ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಮೇಳವನ್ನು ಗೃಹ ಸಚಿವ ಡಾ. ಎಂ.ಬಿ.ಪಾಟೀಲ್ ಉದ್ಘಾಟಿಸಲಿದ್ದಾರೆ. ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಸ್ಮರಣ ಸಂಚಿಕೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಭಾಸ್ಕರ್ ಮೊಯ್ಲಿ, ಯೆನೆಪೊಯ ವಿಶ್ವವಿದ್ಯಾನಿಲಯದ ಕುಲಪತಿ ವೈ.ಅಬ್ದುಲ್ಲಾ ಕುಂಞಿ, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ಬ್ಯಾರಿ ಮೇಳದಲ್ಲಿ ರಾಜಕೀಯ ಹಾಗೂ ಸಾಮಾಜಿಕ ನೇತಾರರು, ಕರ್ನಾಟಕ ರಾಜ್ಯದಿಂದ ಹಾಗೂ ಗಲ್ಫ್ ರಾಷ್ಟ್ರಗಳಿಂದ ಉದ್ಯಮಿಗಳು ಭಾಗವಹಿಸಲಿದ್ದಾರೆ.
ಮೇಳದಲ್ಲಿ ವಿವಿಧ ವ್ಯಾಪಾರದ ಮಳಿಗೆಗಳು, ವಿಚಾರ ವಿನಿಮಯ, ಸಾಮಾಜಿಕ ಸಮ್ಮಿಲನ, ಆಹಾರ ಮಳಿಗೆಗಳು ಮುಂತಾದ ವಿಶೇಷ ಮಳಿಗೆಗಳು ಗ್ರಾಹಕರಿಗೆ ಹಾಗೂ ವ್ಯಾಪಾರಸ್ಥರಿಗೆ ಅನುಕೂಲಕರವಾಗಲಿವೆ. ಪ್ರತಿದಿನ ಸಂಜೆ ಕರ್ನಾಟಕ ಕಲೆಯಾದ ಬ್ಯಾರಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಬ್ಯಾರಿ ಮೇಳದ ಸಂಚಾಲಕ ಮನ್ಸೂರ್ ಅಹ್ಮದ್ ಹಾಗೂ ಬಿಸಿಸಿಐ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ ತಿಳಿಸಿದ್ದಾರೆ.
Comments are closed.