ಕರಾವಳಿ

ಈ ಬಾರಿಯೂ ಎನ್‌ಡಿಎ 300ಕ್ಕೂ ಹೆಚ್ಚು ಸೀಟು ಗಳಿಸುವುದು ನಿಶ್ಚಿತ ; ಮಂಗಳೂರಿನಲ್ಲಿ ಮೋದಿ ಸಹೋದರ ಪ್ರಹ್ಲಾದ ಮೋದಿ ಭವಿಷ್ಯ

Pinterest LinkedIn Tumblr

ಮಂಗಳೂರು, ಫೆಬ್ರವರಿ. 13: ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ಮೋದಿ ಮಾಡಿರುವ ಕಾರ್ಯಗಳನ್ನು ಜನರು ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಎನ್‌ಡಿಎ 300ಕ್ಕೂ ಹೆಚ್ಚು ಸೀಟು ಗಳಿಸುವುದು ನಿಶ್ಚಿತ ಎಂದ‌ು ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ ಮೋದಿ ಹೇಳಿದ್ದಾರೆ.

ಜಿಲ್ಲೆಯ ದೇವಸ್ಥಾನಗಳಿಗೆ ಭೇಟಿ ನೀಡುವುದಕ್ಕಾಗಿ ಮಂಗಳೂರಿಗೆ ಮಂಗಳವಾರ ಆಗಮಿಸಿದ್ದ ಸಂದರ್ಭ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್‌ ಮೋದಿ ಅವರು, ದೇಶದಲ್ಲಿ ಐದು ವರ್ಷಗಳಲ್ಲಿ ಮೋದಿಜೀ ಏನು ಮಾಡಿಲ್ಲ ಹೇಳಿ? ಜನತೆ ಅವರನ್ನು ಈಗಾಗಲೇ ಸ್ವೀಕರಿಸಿದ್ದಾರೆ. ಆದರೆ ಕಾಂಗ್ರೆಸ್‌ನವರಿಗೆ ಈ ಬಗ್ಗೆ ಗೊತ್ತಿಲ್ಲ. ಕಾಂಗ್ರೆಸಿಗರು ಚಿಕ್ಕ ವಿಷಯಗಳನ್ನು ದೊಡ್ಡದು ಮಾಡುತ್ತಿದ್ದಾರೆ. ಈ ಬಾರಿಯೂ ಎನ್‌ಡಿಎ 300ಕ್ಕೂ ಹೆಚ್ಚು ಸೀಟುಗಳಿಸಲಿದೆ ಎಂದು ಅವರು ಭವಿಷ್ಯ ನುಡಿದರು.

ರಾಜಕೀಯ ಪ್ರವೇಶದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ರಾಜಕೀಯಕ್ಕೆ ಬರುವ ಬಗ್ಗೆ ಯೋಚನೆಯೇ ಮಾಡಿಲ್ಲ. ನಮ್ಮ ಪರಿವಾರದಿಂದ ನರೇಂದ್ರ ಭಾಯ್ ಒಬ್ಬರೇ ಸಾಕು. ಅವರಿಗೇ ಕೆಲವರು ಹೆದರುತ್ತಾರೆ. ಹೀಗಿರುವಾಗ ನಾನು ಯಾಕೆ ? ಎಂದು ಪ್ರಶ್ನಿಸಿದರು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ನಾನೆಂದೂ ಬೆಂಬಲ ಕೊಟ್ಟಿಲ್ಲ, ಬೆಂಬಲ ಕೊಡುವುದೂ ಇಲ್ಲ. ಯಾವುದೋ ಮಾಧ್ಯಮದಲ್ಲಿ ನನ್ನ ಹೇಳಿಕೆ ತಿರುಚಲಾಗಿದೆ. ನಾನು ರೇಶನ್ ಅಂಗಡಿ ಡೀಲರುಗಳ ಒಕ್ಕೂಟದ ರಾಷ್ಟ್ರೀಯ ಉಪಾಧ್ಯಕ್ಷ, ಆ ನೆಲೆಯಲ್ಲಿ ಕೆಲವೊಂದು ವಿಚಾರ ಮಾತನಾಡುತ್ತೇನೆ, ಕೇಂದ್ರ ಸರ್ಕಾರದ ವಿರುದ್ಧವೂ ಮಾತನಾಡಿದ್ದೇನೆಯೇ ಹೊರತು, ಎನ್‌ಡಿಎ ಸರ್ಕಾರದ ವಿರೋಧಿಯಲ್ಲ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದರು.

ಪ್ರಿಯಾಂಕ ಗಾಂಧಿ ಸಕ್ರಿಯ ರಾಜಕಾರಣಕ್ಕಿಳಿದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಿಯಾಂಕ ಬರಲಿ, ಪ್ರಿಯದರ್ಶಿನಿಯೇ ಬರಲಿ, 2019ರಲ್ಲೂ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಜನರ ಮನಸ್ಸಿನಲ್ಲಿದ್ದರೆ ಅದನ್ನು ಯಾರೂ ತಪ್ಪಿಸಲಾಗುವುದಿಲ್ಲ ಎಂದು ಹೇಳಿದರು.

Comments are closed.