ಕರಾವಳಿ

ಕಾಂಗ್ರೆಸ್‌ನ ಮಾಜಿ ಕಾರ್ಪೊರೇಟರ್ ರಾಧಾಕೃಷ್ಣ ಬಿಜೆಪಿಗೆ?..

Pinterest LinkedIn Tumblr

ಮಂಗಳೂರು, ಎಪ್ರಿಲ್.16: ಕಾಂಗ್ರೆಸ್‌ನ ಮಾಜಿ ಕಾರ್ಪೊರೇಟರ್ (ಉರ್ವಾ – ಆಶೋಕನಗರ ವಾರ್ಡ್) ರಾಧಾಕೃಷ್ಣ ಅವರು ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.

1980ರಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದು, ಈವರೆಗೆ ದ.ಕ.ಜಿಲ್ಲಾ ಕಾರ್ಯದರ್ಶಿಯಾಗಿದ್ದು, ಇದುವರೆಗೂ ಮನಪಾ ಸದಸ್ಯರಾಗಿದ್ದು, ಜೊತೆಗೆ ಮಂಗಳೂರು ಮಹಾ ನಗರ ಪಾಲಿಕೆಯಲ್ಲಿ ಹಣಕಾಸು ಸ್ಥಾಯಿ ಸಮಿತಿಯ ಅಧ್ಯಕ್ಷರೂ ಆಗಿದ್ದ ಕಾಂಗ್ರೆಸ್‌ನ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿಯವರ ಬಲಗೈ ಬಂಟರಲ್ಲಿ ಒಬ್ಬರಾಗಿದ್ದ ರಾಧಾಕೃಷ್ಣ ಅವರು ಬಿಜೆಪಿ ಸೇರುವುದು ಖಚಿತವಾಗಿದೆ.

ಇದಕ್ಕೆ ಪೂರಕ ಎಂಬಂತೆ ಕಾಂಗ್ರೆಸ್ ಪಕ್ಷದ ಹುದ್ದೆ ಮತ್ತು ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ತಾನು ರಾಜೀನಾಮೆ ಸಲ್ಲಿಸಿರುವುದಾಗಿ ಸ್ವತಹ ಮಾಜಿ ಕಾರ್ಪೊರೇಟರ್ ರಾಧಾಕೃಷ್ಣ ಅವರೇ ಹೇಳಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ದ.ಕ. ಮತ್ತು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಲ್ಲವರಿಗೆ ಸ್ಪರ್ಧಿಸಲು ಟಿಕೆಟ್ ನೀಡದೆ ಅನ್ಯಾಯ ಎಸಗಿರುವುದನ್ನು ಪ್ರತಿಭಟಿಸಿ ತಾನು ಪಕ್ಷದ ಹುದ್ದೆ ಮತ್ತು ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಹೇಳಿದ್ದಾರೆ.

ಕಾಂಗ್ರೆಸ್ ಅವಿಭಜಿತ ದ.ಕ.ಜಿಲ್ಲೆಯ ಎರಡು ಕ್ಷೇತ್ರಗಳ ಪೈಕಿ ಒಂದರಲ್ಲಿ ಬಿಲ್ಲವರಿಗೆ ಟಿಕೆಟ್ ನೀಡುತ್ತಲೇ ಇತ್ತು. ಆದರೆ ಈ ಬಾರಿ ಕಾಂಗ್ರೆಸ್ ಆ ಅವಕಾಶ ನೀಡದಿರುವುದು ಖಂಡನೀಯ. ಸ್ವಾಭಿಮಾನಿ ಬಿಲ್ಲವರನ್ನು ಅದರಲ್ಲೂ ಕೋಟಿ-ಚೆನ್ನಯರು, ಕಾಂತಬಾರೆ-ಬೂದಬಾರೆ ಎಂಬ ಪುಣ್ಯಪುರಷರಿಗೆ ಅವಮಾನಿಸಿರುವುದಕ್ಕೆ ಇದು ಸಾಕ್ಷಿಯಾಗಿದೆ. ಹಾಗಾಗಿ ಕಾಂಗ್ರೆಸ್ ಪಕ್ಷಕ್ಕೆ ವಿರುದ್ಧವಾಗಿ ಮತ ಚಲಾಯಿಸಬೇಕು ಎಂದು ರಾಧಾಕೃಷ್ಣ ಅವರು ಕರೆ ನೀಡಿದ್ದಾರೆ.

Comments are closed.