ಕರಾವಳಿ

ಶಾಸಕ ಕಾಮತ್ ರಿಂದ ಮಳೆಗಾಗಿ ಮಂಗಳಾದೇವಿಗೆ ವಿಶೇಷ ಪ್ರಾರ್ಥನೆ

Pinterest LinkedIn Tumblr

ಮಂಗಳೂರು : ಮಂಗಳೂರಿನ ಮಹಾನಗರದಲ್ಲಿ ಕುಡಿಯುವ ನೀರಿನ ಕೊರತೆ ಉದ್ಭವಿಸಿದ್ದು, ಶೀಘ್ರದಲ್ಲಿ ಮಳೆ ಬಂದು ನಗರದ ಜನತೆಯ ಸಂಕಷ್ಟ ಬಗೆಹರಿಯಲು ದೇವರು ಅನುಗ್ರಹಿಸಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಮಂಗಳಾದೇವಿ ದೇವಸ್ಥಾನದಲ್ಲಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು.

ಮಧ್ಯಾಹ್ನದ ಮಹಾಪೂಜೆಯಲ್ಲಿ ಭಾಗವಹಿಸಿದ ಶಾಸಕ ಕಾಮತ್ ಮತ್ತು ಭಕ್ತಜನರು ದೇವರಲ್ಲಿ ಶೀಘ್ರ ಮಳೆಗಾಗಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಸಂಕ್ರಮಣದ ಈ ಪರ್ವದಿನದಂದು ನಗರದ ಎಲ್ಲಾ ದೇವಸ್ಥಾನಗಳಲ್ಲಿ ಭಜಕರು, ಆಡಳಿತ ಮಂಡಳಿ ಸದಸ್ಯರು, ಪಕ್ಷದ ಕಾರ್ಯಕರ್ತರು ಮಳೆಗಾಗಿ ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸಿದ್ದೇವೆ. ಮಂಗಳೂರಿಗೆ ಹೆಸರು ಬರಲು ಕಾರಣವಾಗಿರುವ ಮಂಗಳಾಂಬೆಯ ಸನ್ನಿಧಿಯಲ್ಲಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ.

ಹಿಂದೆ ಈ ರೀತಿ ನೀರಿನ ಕೊರತೆ ಉಂಟಾದಾಗ ನಮ್ಮ ಹಿರಿಯರು ದೇವರನ್ನು ಪ್ರಾರ್ಥಿಸಿದಾಗ ಮಳೆ ಬಂದು ತೊಂದರೆಗಳು ದೂರವಾಗಿದ್ದವು ಎನ್ನುವುದು ನಮಗೆ ಗೊತ್ತೆ ಇದೆ. ಈಗ ಮಳೆಯಿಲ್ಲದೆ ನಾವು ಪಡುತ್ತಿರುವ ಸಂಕಟವನ್ನು ದೇವಿಯ ಮುಂದೆ ಹೇಳಿಕೊಂಡಿದ್ದೇವೆ. ದೇವಿ ಕಾಪಾಡುತ್ತಾಳೆ ಎನ್ನುವ ನಂಬಿಕೆ ಇದೆ ಎಂದು ಹೇಳಿದರು.

ಶಾಸಕರೊಂದಿಗೆ ಪಾಲಿಕೆ ಮಾಜಿ ಸದಸ್ಯರಾದ ಪ್ರೇಮಾನಂದ ಶೆಟ್ಟಿ, ವಿಜಯಕುಮಾರ್ ಶೆಟ್ಟಿ, ಬಿಜೆಪಿ ಮುಖಂಡರಾದ ವಸಂತ ಜೆ ಪೂಜಾರಿ, ಪ್ರಭಾಮಾಲಿನಿ, ರಮೇಶ್ ಕಂಡೆಟ್ಟು, ಭಾಸ್ಕರಚಂದ್ರ ಶೆಟ್ಟಿ ಸಹಿತ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು

Comments are closed.