ಮಂಗಳೂರು, ಜುಲೈ 19 : ಕರ್ನಾಟಕ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ, ಕರ್ನಾಟಕದ ಕರಾವಳಿ ಭಾಗ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸೂಚನೆಯಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಶನಿವಾರ ರೆಡ್ ಅಲರ್ಟ್ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ಶನಿವಾರದಿಂದ ಸೋಮವಾರದವರೆಗೆ ಪ್ರತಿದಿನ 200 ಮಿಲಿ ಮೀಟರ್ ಗಿಂತ ಮೇಲ್ಪಟ್ಟು ಮಳೆಯಾಗುವ ನಿರೀಕ್ಷೆಯಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜುಲೈ 20ರ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿದ್ದಾರೆ. ದ.ಕ ಜಿಲ್ಲೆಯ ಸರಕಾರಿ, ಅನುದಾನಿತ ಮತ್ತು ಖಾಸಗಿಯ ಪದವಿ ಪೂರ್ವ ಎಲ್ಲಾ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸುವಂತೆ ಅವರು ಆದೇಶಿಸಿದ್ದಾರೆ
ರೆಡ್ ಆಲರ್ಟ್ ಘೋಷಣೆ ಆಗಿರುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ತುರ್ತು ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.ಇದೇ ವೇಳೆ ಮೀನುಗಾರರು ಕಡ್ಡಾಯವಾಗಿ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಜೊತೆಗೆ ಸಮುದ್ರ ವಿಹಾರಕ್ಕೆ ಆಗಮಿಸುವ ಪ್ರವಾಸಿಗರು ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ನೀರಿರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಕರಾವಳಿಯಲ್ಲಿ ಇನ್ನೆರಡು ದಿನಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ತೀವ್ರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಲ್ಲಿ ಕಂಟ್ರೋಲ್ ರೂಂಗಳನ್ನು ಸಕ್ರಿಯಗೊಳಿಸಲಾಗಿದೆ. ತುರ್ತು ಸೇವೆಗಾಗಿ ಟೋಲ್ ಫ್ರೀ ಸಂಖ್ಯೆ ನೀಡಲಾಗಿದೆ. ತುರ್ತು ಸೇವೆಯ ಕಂಟ್ರೋಲ್ ರೂಮ್ 24*7 ಕಾರ್ಯನಿರ್ವಹಿಸಲಿದೆ. ಕಂಟ್ರೋಲ್ ರೂಮ್ – 1077, ವ್ಯಾಟ್ಸಪ್ ಸಂಖ್ಯೆ; 9483908000.
Comments are closed.