ಕರಾವಳಿ

ಕರಾವಳಿಯಲ್ಲಿ ನಿರಂತರ ಮಳೆ : ಶನಿವಾರ ಕೂಡ ಶಾಲೆ, ಕಾಲೇಜುಗಳಿಗೆ ರಜೆ

Pinterest LinkedIn Tumblr

ಮಂಗಳೂರು, ಆಗಸ್ಟ್. 09: ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಎಡೆಬಿಡದೆ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಸ್ನಾತಕೋತ್ತರ ಪದವಿವರೆಗೆ) ಆ.10ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಹೆಚ್ಚಿನ ನದಿಗಳು ತುಂಬಿ ಹರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗೃತ ಕ್ರಮವಾಗಿ ಶನಿವಾರ ಕೂಡ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯಾವುದೇ ಅನಾಹುತಗಳಿಗೆ ಅವಕಾಶ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮ ಕೈಗೊಂಡಿರುವುದಾಗಿ ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು. ಮೀನುಗಾರರಿಗೆ ಮುಂದಿನ ಮೂರು ದಿನಗಳವರೆಗೆ ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಲಾಗಿದೆ. ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು ಎಂದು ಹೇಳಿದ್ದಾರೆ.

ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿರಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು.

ಪ್ರವಾಸಿಗರು/ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿನ ತುರ್ತು ಸೇವೆ (1077)ಗೆ ದಿನದ 24 ಗಂಟೆಯೂ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶದಲ್ಲಿ ಸೂಚನೆ ನೀಡಿದ್ದಾರೆ.

Comments are closed.