ಕರಾವಳಿ

ಅಭಿವೃದ್ಧಿ ನಿರಂತರವಾದ ಪ್ರಕ್ರಿಯೆ – ಸಮಾಜಮುಖಿ ಕೆಲಸ ಮಾಡಿ : ಪ್ರೊ. ಪಿ.ಎಸ್. ಯಡಪಡಿತ್ತಾಯ

Pinterest LinkedIn Tumblr

ಮಂಗಳೂರು, ಸೆಪ್ಟಂಬರ್ 20 : ಸಂಸ್ಥೆಗೆ ನಮ್ಮಿಂದ ಯಾವ ರೀತಿಯ ಅವಶ್ಯಕತೆ ಇದೆ ಎಂಬುದನ್ನು ತಿಳಿದುಕೊಂಡು ಸಮಾಜಮುಖಿಯಾಗಿ ಕೆಲಸ ಮಾಡಬೇಕು. ಅಭಿವೃದ್ಧಿ ನಿರಂತರವಾದ ಪ್ರಕ್ರಿಯೆಯಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದರು.

ಶುಕ್ರವಾರ ಮಂಗಳೂರು ವಿಶ್ವವಿದ್ಯಾನಿಲಯದ ರವೀಂದ್ರ ಕಲಾಭವನದಲ್ಲಿ ನಡೆದ ಸಂಸ್ಥಾಪನಾ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಈ ಹಿಂದೆ ವಿಶ್ವವಿದ್ಯಾನಿಲಯವನ್ನು ಉತ್ತಮ ರೀತಿಯಲ್ಲಿ ಬೆಳೆಸಿದ್ದಾರೆ, ನಾನು ಇಂದಿನ ಪೀಳಿಗೆಗೆ ಅನುಗುಣವಾಗಿ ಬದಲಾವಣೆ ಮಾಡುತ್ತೇನೆ. ಶಿಕ್ಷಣ ಸಂಸ್ಥೆಗಳು ಜ್ಞಾನ ಸೃಷ್ಟಿ ಮತ್ತು ಜ್ಞಾನ ಪ್ರಸಾರ ಕಾರ್ಯದಲ್ಲಿ ತೊಡಗಿಸಿಕೊಂಡಾಗ ಮಾತ್ರ ಯುವಸಮೂಹ ಸರಿ ದಾರಿಯಲ್ಲಿ ನಡೆಯಲು ಸಾಧ್ಯ.

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಲಿತ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸನ್ನು ಕಂಡಿದ್ದಾರೆ ಅದರಲ್ಲಿ ಕೆಲವರು ಕೊಡುಗೆಯ ರೂಪದಲ್ಲಿ ಜೀವಂತವಾಗಿದ್ದಾರೆ. ನಾವು ಮಾಡುವ ಕೆಲಸದಲ್ಲಿ ನಮಗೆ ತೃಪ್ತಿ ಇರಬೇಕು ಅದು ನಮ್ಮನ್ನು ಉನ್ನತ ಮಟ್ಟಕ್ಕೆ ಕರೆದೊಯ್ಯುತ್ತದೆ ಎಂದು ಹೇಳಿದರು.

ಕಲಿಕೆ ಜೀವನ ಪರ್ಯಂತ ನಿರಂತರವಾದ ಪ್ರಕ್ರಿಯೆ, 150 ವರ್ಷಗಳ ಹಿಂದೆ ಈ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಸಂಸ್ಥಾಪಕರ ಉದ್ದೇಶ ಇಂದು ಸಂಪೂರ್ಣವಾಗಿದೆಯೇ ಅಥವಾ ಕುಂದುಕೊರತೆಗಳು ಇದೇಯೇ ಎಂಬುದನ್ನು ನೋಡಬೇಕಾಗುತ್ತದೆ, ಎಲ್ಲಾ ವಿದ್ಯಾರ್ಥಿಗಳು ಕಾಲೇಜುಗಳ ಆಯ್ಕೆಯಲ್ಲಿ ಮೊದಲ ಆಯ್ಕೆಯಾಗಿ ನಮ್ಮ ಕಾಲೇಜಿಗೆ ಬರಬೇಕು.

ಇಂದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಕೊರತೆ ಎದ್ದು ಕಾಣುತ್ತಿದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಬೇಕು, ಸಂದರ್ಶನದ ಸಮಯದಲ್ಲಿ ನೆರವಾಗಬೇಕು, ಮುಂದಿನ ಹತ್ತು ವರ್ಷಕ್ಕೆ ರೂಪಿತವಾಗಿ ದೂರದರ್ಶಿತ್ವ ಇಟ್ಟುಕೊಳ್ಳುವ ಅಗತ್ಯವಿದೆ ಎಂದು ಉದ್ಯಮಿ ಮತ್ತು ಲೆಕ್ಕ ಪರಿಶೋಧಕ ನಂದಗೋಪಾಲ್ ಶೆಣೈ ಜಿ ಹೇಳಿದರು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ, ವಿಶ್ವ ವಿದ್ಯಾನಿಲಯ ಕಾಲೇಜಿನ ನಿವೃತ್ತ ಉದ್ಯೋಗಿಗಳ ಸಂಘದ ಅಧ್ಯಕ್ಷ ಬಿ.ಗೋವಿಂದ ನಾಯಕ್, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Comments are closed.