ಕರಾವಳಿ

ಪ್ರಗತಿ ಪರಿಶೀಲನಾ ಸಭೆಗಳಿಗೆ ಗೈರು ಹಾಜರಾದರೆ ಕ್ರಮ – ಜಿಲ್ಲಾಧಿಕಾರಿ ಎಚ್ಚರಿಕೆ.

Pinterest LinkedIn Tumblr

ಮಂಗಳೂರು, ಅಕ್ಟೋಬರ್ 18: ತಾಲೂಕು ಮಟ್ಟದ ಯಾವುದೇ ಅಧಿಕಾರಿಗಳು ಸಭೆಗೆ ಗೈರು ಹಾಜರಾದಲ್ಲಿ, ಮುಂದಿನ ಸಭೆಯಲ್ಲಿ ಕಡ್ಡಾಯವಾಗಿ ಉಪಸ್ಥಿತರಿದ್ದು ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಯೋಜನೆಯ ಎಲ್ಲಾ ಪ್ರಗತಿಯನ್ನು ಸಭೆಗೆ ಒದಗಿಸತಕ್ಕದ್ದು, ಇಲ್ಲದಿದ್ದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್‍ನಲ್ಲಿ ನಡೆದ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತಾನಾಡಿದ ಅವರು ಎಸ್‍ಸಿಪಿ, ಟಿಎಸ್‍ಪಿ ಯೋಜನೆಗಳನ್ನು ಆದಷ್ಟು ಬೇಗ ಫಲಾನುಭವಿಗಳಿಗೆ ದೊರಕುವಂತೆ ಜಾರಿಗೆ ತರಲು ತಿಳಿಸಿದರು.

ಕೃಷಿ ಇಲಾಖೆ ಎಸ್‍ಸಿಎಸ್‍ಪಿ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ 16.40 ಲಕ್ಷ ಅನುದಾನ ಮಂಜೂರಾಗಿದ್ದು, ಶೇಕಡಾ 50% ರಷ್ಟು ಭೌತಿಕ ಸಾಧನೆಯಾಗಿದೆ. ಟಿಎಸ್‍ಪಿ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ 7.40 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಶೇಕಡಾ 64% ರಷ್ಟು ಸಾಧನೆಯಾಗಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ಯೋಗೀಶ್ ಎಸ್.ಬಿ ವಿವರ ನೀಡಿದರು.

ತೋಟಗಾರಿಗೆ ಇಲಾಖೆ ಎಸ್‍ಸಿಎಸ್‍ಪಿ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ 3.40 ಲಕ್ಷ ಅನುದಾನ ಮಂಜೂರಾಗಿದ್ದು ಶೇಕಡಾ 52% ರಷ್ಟು ಭೌತಿಕ ಸಾಧನೆಯಾಗಿದೆ. ಟಿಎಸ್‍ಪಿ ಯೋಜನೆಯಡಿಯಲ್ಲಿ 4.48 ಲಕ್ಷ ಅನುದಾನ ಬಿಡುಗಡೆಯಾಗಿದ್ದು ಶೇಕಡಾ 44% ರಷ್ಟು ಸಾಧನೆಯಾಗಿರುತ್ತದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯಧಿಕಾರಿ ರಾಮಕೃಷ್ಣ ರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉಪನಿರ್ದೇಶಕ ಸುಂದರ್ ಪೂಜಾರಿ ಮತ್ತು ಸಂಬಂದಪಟ್ಟ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.