ಮಂಗಳೂರು / ಕುಂಜತಬೈಲ್, ಜನವರಿ.24 : ನಶಿಸಿ ಹೋಗುತ್ತಿರುವ ಭಾರತೀಯ ವಿದ್ಯೆ ಹಾಗೂ ಕಲೆಗಳನ್ನು ಉಳಿಸಿ ಬೆಳೆಸುವ ಮಹತ್ಸಂಕಲ್ಪದೊಂದಿಗೆ ಗೋಕರ್ಣ ಸಮೀಪದ ಅಶೋಕೆಯಲ್ಲಿ ಶ್ರೀರಾಮಚಂದ್ರಾಪುರ ಮಠ ಆಚಾರ್ಯ ಚಾಣಕ್ಯನ ಹೆಸರಿನಲ್ಲಿ ವಿಷ್ಣುಗುಪ್ತ ವಿಶ್ವವಿದ್ಯಾಪೀಠವನ್ನು ಸ್ಥಾಪಿಸುತ್ತಿದೆ.. ನೂತನ ವಿವಿವಿ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಏಪ್ರಿಲ್ 26ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳು ತಿಳಿಸಿದರು.
ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಮಾಧ್ಯಮಗೋಷ್ಠಿ ಸಂಯೋಜಕ ಹಾಗೂ ಶ್ರೀಸಂಯೋಜಕ- ಮಾಧ್ಯಮ, ಶ್ರೀರಾಮಚಂದ್ರಾಪುರಮಠದ ಉದಯಶಂಕರ್ ಭಟ್ ಮಿತ್ತೂರು ಮತ್ತು ಕುಟುಂಬದವರ ವತಿಯಿಂದ ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳಿಗೆ ನಗರದ ಕುಂಜತ್ತಬೈಲ್ನ ಮಾರುತಿ ಬಡವಾಣೆ ಬಳಿಯ ಉನ್ನತಿಯಲ್ಲಿ ಎರಡು ದಿನಗಳ ಕಾಲ ನಡೆದ ಭಿಕ್ಷಾಸೇವೆ ಕಾರ್ಯಕ್ರಮ ಗುರುವಾರ ಸಮಾರೋಪಗೊಂಡಿದ್ದು, ಈ ಸಂದರ್ಭ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸ್ವಾಮಿಗಳು, ಈ ಮಾಹಿತಿ ನೀಡಿದರು.
ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಪೀಠಾರೋಹಣ ಮಾಡಿ 25 ವಸಂತಗಳು ತುಂಬಿದ್ದು, ಸುವರ್ಣಯುಗ ಆರಂಭದ ನೆನಪಿಗಾಗಿ ಈ ವಿಶಿಷ್ಟ ಕೊಡುಗೆಯನ್ನು ಶ್ರೀರಾಮಚಂದ್ರಾಪುರಮಠ ಸಮಾಜಕ್ಕೆ ನೀಡುತ್ತಿದೆ. ಭಾರತೀಯ ಗೋವಂಶ ರಕ್ಷಣೆಗಾಗಿ ಕಳೆದ ವರ್ಷ ವಿಶ್ವದ ಏಕೈಕ ಗೋಸ್ವರ್ಗವನ್ನು ಸಮಾಜಕ್ಕೆ ಧಾರೆ ಎರೆದ ಶ್ರೀಮಠ ಇದೀಗ ಆದಿಗುರುವಿಗೆ ಕಿರುಗಾಣಿಕೆಯಾಗಿ ವಿಶ್ವವಿದ್ಯಾಪೀಠವನ್ನು ಸಮರ್ಪಿಸುತ್ತಿದೆ.ಇಡೀ ಸಮಾಜದಲ್ಲಿ ಧರ್ಮಜಾಗೃತಿ ಹಾಗೂ ದೇಶದ ಸಂಸ್ಕೃತಿಯ ಪುನರುತ್ಥಾನಕ್ಕೆ ನಾಂದಿ ಹಾಡುವ ವಿಶ್ವವಿದ್ಯಾಪೀಠವೊಂದರ ಸ್ಥಾಪನೆಯ ಅಗತ್ಯತೆ- ಅನಿವಾರ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ವಿವಿವಿ ಸ್ಥಾಪನೆಗೆ ಶ್ರೀಮಠ ಮುಂದಾಗಿದೆ ಎಂದು ಶ್ರೀರಾಘವೇಶ್ವರಭಾರತೀ ಸ್ವಾಮಿಗಳು ತಿಳಿಸಿದರು.
ವಿಶ್ವವಿದ್ಯಾಪೀಠದ ಮಹತಿಯನ್ನು ಸಮಾಜಕ್ಕೆ ಪರಿಚಯಿಸುವ ದೃಷ್ಟಿಯಿಂದ ಈಗಾಗಲೇ ಬೆಂಗಳೂರಿನಲ್ಲಿ ಸಂವಾದ ಏರ್ಪಡಿಸಲಾಗಿದ್ದು, ಅದ್ಭುತ ಸ್ಪಂದನೆ ಸಿಕ್ಕಿದೆ. ಮಂಗಳೂರಿನಲ್ಲೂ ಮುಂದಿನ ತಿಂಗಳು ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.
ಭರತಖಂಡದ ಸುವರ್ಣಯುಗದ ಕುರುಹಾಗಿ ಉಳಿದಿರುವ ತಕ್ಷಶಿಲೆ ವಿಶ್ವವಿದ್ಯಾನಿಲಯದ ಪುನರವರಣ ಮತ್ತು ಧರ್ಮಯೋಧರ ಸೃಷ್ಟಿ ಈ ಯೋಜಿತ ವಿಶ್ವವಿದ್ಯಾಪೀಠದ ಮೂಲಧ್ಯೇಯವಾಗಿದೆ.
ಅಶೋಕೆಯಲ್ಲಿ ಸುಮಾರು 10 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ವಿಶಿಷ್ಟ ಗುರುಭವನವನ್ನು ವಿಶ್ವವಿದ್ಯಾಪೀಠಕ್ಕೆ ಮೊದಲ ಸಮರ್ಪಣೆಯಾಗಿ ಶ್ರೀಗಳು ಸಲ್ಲಿಸಿದ್ದಾರೆ. ಪೀಠಾರೋಹಣದ ದಿನವೇ ಶ್ರೀಶಂಕರರ ನೆನಪಿನಲ್ಲಿ ವಿಶ್ವವಿದ್ಯಾನಿಲಯ ಸ್ಥಾಪಿಸುವ ಘೋಷಣೆಯನ್ನು ಶ್ರೀಗಳು ಮಾಡಿದ್ದರು. ಶ್ರೀಗಳ ಸಂಕಲ್ಪ ಸಾಕಾರವಾಗುವ ಕಾಲ ಇದೀಗ ಸನ್ನಿಹಿತವಾಗಿದೆ.
ವಿಶ್ವವಿದ್ಯಾಪೀಠ : ದಾಖಲೆ ಹತ್ತು ತಿಂಗಳ ಅವಧಿಯಲ್ಲಿ ಪರಿಪೂರ್ಣ ವಿಶ್ವವಿದ್ಯಾಪೀಠವನ್ನು ಸಮಾಜಕ್ಕೆ ಸಮರ್ಪಿಸಲು ಉದ್ದೇಶಿಸಲಾಗಿದೆ. ಭಾರತೀಯ ವಿದ್ಯೆಗಳನ್ನು ಉಳಿಸಿ ಬೆಳೆಸುವುದು ಹಾಗೂ ದೇಶರಕ್ಷಣೆ- ಧರ್ಮರಕ್ಷಣೆಗೆ ಬದ್ಧರಾದ, ಸಂಸ್ಕೃತಿಯ ಆಳ ಅರಿವು ಇರುವ ಧರ್ಮಯೋಧರನ್ನು ಸಿದ್ಧಪಡಿಸುವುದು ಈ ವಿಶ್ವವಿದ್ಯಾಪೀಠದ ಉದ್ದೇಶ. ತಕ್ಷಶಿಲೆ ವಿಶ್ವವಿದ್ಯಾನಿಲಯದಲ್ಲಿ ಆಚಾರ್ಯ ವಿಷ್ಣುಗುಪ್ತ ಚಾಣಕ್ಯನು ಧರ್ಮಯೋಧ ಚಂದ್ರಗುಪ್ತನನ್ನು ಸೃಷ್ಟಿಸಿ ಆತನ ಮೂಲಕ ನಂದನ ಅಂಧಕಾರಶಾಸನವನ್ನು ಕೊನೆಗೊಳಿಸಿ ಧರ್ಮಸಾಮ್ರಾಜ್ಯ ಉದಯಕ್ಕೆ ಕಾರಣನಾದಂತೆ ವಿಶ್ವವಿದ್ಯಾಪೀಠದ ಮಡಿಲಲ್ಲಿ ವಿಶ್ವವಿಜಯೀ ವಿದ್ಯಾವೀರರನ್ನು ಸೃಜಿಸುವ ಮೂಲಕ ಭಾರತವರ್ಷದಲ್ಲಿ ಮತ್ತೊಮ್ಮೆ ರಾಮರಾಜ್ಯವನ್ನು ಉದಯಗೊಳಿಸುವುದು, ಧರ್ಮಪ್ರಭುತ್ವವನ್ನು ಮರಳಿ ಸ್ಥಾಪಿಸುವುದು ಯೋಜಿತ ವಿಶ್ವವಿದ್ಯಾಪೀಠದ ಧ್ಯೇಯವಾಗಿದೆ.
ಎಲ್ಲಿ?: ಶಂಕರಾಚಾರ್ಯರು ಮೂರು ಬಾರಿ ಭೇಟಿ ನೀಡಿದ ಮತ್ತು ಹಲವು ತಿಂಗಳ ಕಾಲ ವಾಸವಿದ್ದ, ಶಂಕರರ ಜ್ಞಾನಶಿಶು ಎನಿಸಿದ ಶ್ರೀರಾಮಚಂದ್ರಾಪುರಮಠದ ಮೂಲಸ್ಥಾನ, ಗೋಕರ್ಣ ಸಮೀಪದ ಅಶೋಕೆಯ ಸ್ವಚ್ಛ, ಸುಂದರ ಪರಿಸರದಲ್ಲಿ ನೂತನ ವಿಶ್ವವಿದ್ಯಾಪೀಠ ತಲೆ ಎತ್ತಲಿದೆ.
ಪಾರಂಪರಿಕ ವಾಸ್ತುಶಿಲ್ಪವನ್ನು ಒಳಗೊಂಡ ಈ ವಿಶಿಷ್ಟ ವಿದ್ಯಾಪೀಠದಲ್ಲಿ ಭಾರತೀಯ ವಿದ್ಯಾವಿಶ್ವವೇ ಅಧ್ಯಯನ ವಸ್ತು. ಭಾರತೀಯ ಸಂಸ್ಕೃತಿಯ ಮೂಲಾಧಾರ ಎನಿಸಿದ ನಾಲ್ಕು ವೇದಗಳು, ಜ್ಯೋತಿಷ್ಯವನ್ನು ಒಳಗೊಂಡ ವೇದದ ಆರು ಅಂಗಗಳು, ಆಯುರ್ವೇದವೇ ಮೊದಲಾದ ನಾಲ್ಕು ಉಪವೇದಗಳು, ರಾಮಾಯಣ ಮಹಾಭಾರತ ಒಳಗೊಂಡಂತೆ ಇತಿಹಾಸ- ಪುರಾಣಗಳು, ಆರು ದರ್ಶನಗಳು, ಸಕಲ ಕಲೆಗಳು, ಸಮಯುಗದ ಜಗತ್ತಿನ ಸಾಮಾನ್ಯ ಜ್ಞಾನ, ಆಧುನಿಕ ತಂತ್ರಜ್ಞಾನ, ದೇಶದ ಚರಿತ್ರೆ, ಸಂವಹನ ಕೌಶಲ, ಕಾನೂನು, ಧರ್ಮಯೋಧನಿಗೆ ಎದುರಾಗಬಹುದಾದ ವಿಪತ್ತುಗಳನ್ನು ಮನಸ್ಸಿನಲ್ಲಿರಿಸಿಕೊಂಡು ಆತ್ಮರಕ್ಷಣೆಯ ಸಮರ ವಿದ್ಯೆಗಳು ವಿದ್ಯಾವಿನ್ಯಾಸ ದಲ್ಲಿ ಸೇರಿವೆ. ವಿಶ್ವವಿದ್ಯಾಪೀಠದಲ್ಲಿ ವಿಕಾಸಗೊಂಡ ವಿದ್ಯಾರ್ಥಿ ಬಾಹ್ಯಜಗತ್ತಿನಲ್ಲಿ ಅಪ್ರಸ್ತುತನಾಗರಬಾರದು ಎಂಬ ಕಾರಣಕ್ಕೆ ಇಂಗ್ಲಿಷ್, ಹಿಂದಿ ಮೊದಲಾದ ನವಸಮಾಜ ಭಾಷೆಗಳ ಅಧ್ಯಯನಕ್ಕೂ ಅವಕಾಶ ಇರುತ್ತದೆ. ಸಮಾಜದ ಎಲ್ಲ ವರ್ಗದವರಿಗೂ ಇಲ್ಲಿ ಅವಕಾಶವಿದ್ದು, ಅವರವರಿಗೆ ಸಲ್ಲುವ ವಿದ್ಯೆಗಳನ್ನು ಅವರು ಪಡೆದುಕೊಳ್ಳಬಹುದಾಗಿದೆ.
ಅತ್ಯಾಧುನಿಕ ಸಂಪರ್ಕ ವ್ಯವಸ್ಥೆ ಮೂಲಕ ದೇಶದ ಮೂಲೆಮೂಲೆಗಳ ತಜ್ಞ ವಿದ್ವಾಂಸರಿಂದ ಪಾಠದ ವ್ಯವಸ್ಥೆ ಇಲ್ಲಿನ ವೈಶಿಷ್ಠ್ಯ. ಸರ್ಕಾರದ ಭಿಕ್ಷೆಗೆ ಕೈಚಾಚದೇ, ಸಂಪನ್ಮೂಲ ಹಾಗೂ ಮಾನ್ಯತೆ ಎರಡೂ ವಿಶ್ವವಿದ್ಯಾಪೀಠದ್ದೇ ಆಗಿರುತ್ತದೆ. ಸರ್ಕಾರದ ಮಾನ್ಯತೆಯ ಅವಶ್ಯಕತೆ ಇರುವಲ್ಲಿ ಪರೀಕ್ಷೆಗಳನ್ನು ಅಧಿಕೃತ ವ್ಯವಸ್ಥೆಯಿಂದ ಪಡೆದುಕೊಳ್ಳಲು ಪರ್ಯಾಯ ಕ್ರಮ ಅನುಸರಿಸಲಾಗುತ್ತದೆ.
ವೇದ- ಶಾಸ್ತ್ರಗಳು, ಪರಂಪರೆ- ಪದ್ಧತಿಗಳನ್ನು ಒಳಗೊಂಡ ಸಮಗ್ರ ಭಾರತೀಯ ಸಂಸ್ಕೃತಿಯಲ್ಲಿ ಹುದುಗಿರುವ ಅದೆಷ್ಟೋ ಮಹತ್ವದ ಸಂಗತಿಗಳ ಕುರಿತು ಸಂಶೋಧನಾಲಯವೊಂದು ಇಲ್ಲಿ ಅನಾವರಣಗೊಳ್ಳಲಿದ್ದು, ಅದು ವಿಶ್ವವಿದ್ಯಾಪೀಠದ ಮುಕುಟಮಣಿಯಾಗಲಿದೆ.
ಶ್ರೀಶಂಕರ ಥೀಂಪಾರ್ಕ್ : ಭಗವತ್ಪಾದರ ಪಾದಸ್ಪರ್ಶದ ಧನ್ಯತೆಯನ್ನು ಕಂಡ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಪರಿಸರದಲ್ಲಿ ಅವರ ಜೀವನ ಸಾಧನೆಗಳನ್ನು ಜೀವಲೋಕಕ್ಕೆ ಮನೋಜ್ಞವಾಗಿ ಬಿಂಬಿಸುವ ಥೀಮ್ ಪಾರ್ಕ್ ನೂತನ ವಿಶ್ವವಿದ್ಯಾಪೀಠದ ಆವರಣದಲ್ಲಿ ತಲೆ ಎತ್ತಲಿದೆ. ದಿವ್ಯೌಷಧವನದ ನಡುವೆ ಶಂಕರರ ಪಾವನ ಜೀವನದ ಶಿಲ್ಪ ಕಲ್ಪ, ಭವ್ಯಭವನದಲ್ಲಿ ಶ್ರೀಶಂಕರರ ಹೆಸರಿನಲ್ಲಿ ಭಾರತೀಯ ಸಂಸ್ಕೃತಿ ಸಂಶೋಧನಾಲಯ, ಆಡಿಯೊ ವಿಡಿಯೊ ಪ್ರದರ್ಶಿನಿ, ವಸ್ತುಸಂಗ್ರಹಾಲಯ, ಬೃಹತ್ ಶಾಂಕರ ಗ್ರಂಥ ಸಂಗ್ರಹಾಗಾರ ಇರುತ್ತದೆ ಎಂದು ಶ್ರೀರಾಘವೇಶ್ವರಭಾರತೀ ಸ್ವಾಮಿಗಳು ಸಮಗ್ರ ಮಾಹಿಯನ್ನು ನೀಡಿದರು.
ಪತ್ರಿಕಾಗೋಷ್ಠಿಗೂ ಮುನ್ನ ಶ್ರೀರಾಘವೇಶ್ವರಭಾರತೀ ಸ್ವಾಮಿಗಳಿಂದ ಆಶೀರ್ವಚನ ಹಾಗೂ ಮಂತ್ರಾಕ್ಷತೆ ಕಾರ್ಯಕ್ರಮ ನಡೆಯಿತು. ಈ ವೇಳೆ ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ, ಹೊಸದಿಂಗಂತ ಪತ್ರಿಕೆಯ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಹಾಗೂ ಆರ್ ಎಸ್ ಎಸ್ ನ ದಕ್ಷಿಣ ಸಹಕಾರ್ಯವಾಹ ಪಿ.ಎಸ್.ಪ್ರಕಾಶ್, ಸ್ಥಳೀಯ ಮನಪಾ ಸದಸ್ಯರು, ವಿವಿಧ ಮುಖಂಡರು ಮತ್ತು 500ಕ್ಕೂ ಮಿಕ್ಕಿ ಭಕ್ತರು ಭಾಗವಹಿಸಿ ಸ್ವಾಮಿಜಿಗಳಿಂದ ಆಶೀರ್ವಾದ ಪಡೆದು ಪ್ರಸಾದ ಬೋಜನ ಸ್ವೀಕರಿಸಿದರು. ಶ್ರೀಸಂಯೋಜಕ- ಮಾಧ್ಯಮ, ಶ್ರೀರಾಮಚಂದ್ರಾಪುರಮಠದ ಉದಯಶಂಕರ್ ಭಟ್ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು.
__ಸತೀಶ್ ಕಾಪಿಕಾಡ್














Comments are closed.