ಕುಂದಾಪುರ: ಬೈಕ್ – ಇನ್ನೋವಾ ಕಾರು – ಸ್ಕಾರ್ಪಿಯೋ ವಾಹನಗಳ ಮಧ್ಯೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ತ್ರಾಸಿ ಸಮೀಪದ ಮೋವಾಡಿ ಕ್ರಾಸ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಬೈಕ್ ಸವಾರ ಹೊಸಾಡು ಮುಲ್ಲಿ ಮನೆ ನಿವಾಸಿ ಸುಕುಮಾರ ದೇವಾಡಿಗ (45) ಸಾವನ್ನಪ್ಪಿದವರು. ಇವರು ಮೋವಾಡಿಯಲ್ಲಿ ಎಲೆಕ್ಟ್ರಿಶಿಯನ್ ವೃತ್ತಿ ಮಾಡುತ್ತಿದ್ದು, ಕೆಲಸ ಮುಗಿಸಿ, ಮನೆಗೆ ಹೋಗುತ್ತಿದ್ದಾಗ ಈ ಅವಘಢ ನಡೆದಿದೆ. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಬೈಂದೂರು – ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಮೋವಾಡಿ ಕ್ರಾಸ್ ಬಳಿ ಬೈಕ್ಗೆ ಇನ್ನೋವಾ ಕಾರು ಹಿಂದಿನಿಂದ ಢಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಸ್ಕಾರ್ಪಿಯೋ ಕಾರು ಇನ್ನೋವಾ ಕಾರಿಗೆ ಢಿಕ್ಕಿಯಾಗಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸುರೇಶ್ ನಾಯ್ಕ್, ಗಂಗೊಳ್ಳಿ ಎಸ್ಐ ವಾಸಪ್ಪ ನಾಯ್ಕ್ ಹಾಗೂ ಪೊಲೀಸ್ ಸಿಬಂದಿ ಭೇಟಿ ನೀಡಿದ್ದು, ಮಾಹಿತಿ ಪಡೆದುಕೊಂಡಿದ್ದಾರೆ.
ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.