ಕರಾವಳಿ

ಭಾರತೀಯರನ್ನು ವಿದೇಶದಿಂದ ಸ್ವದೇಶಕ್ಕೆ ಕರೆತರಲು ಸಿದ್ಧತೆ : ಮಂಗಳೂರಿನ ಲಾಡ್ಜ್‌ಗಳಲ್ಲಿ ಕ್ವಾರೆಂಟೈನ್

Pinterest LinkedIn Tumblr

ಮಂಗಳೂರು ಮೇ 06 : ಕೊರೋನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಸಿದ್ಧತೆಗಳು ನಡೆಯುತ್ತಿರುವುದರಿಂದ ಮಂಗಳೂರಿನ ಹೋಟೆಲ್ ವಸತಿಗೃಹ ಸಂಸ್ಥೆಗಳೊಂದಿಗೆ ಜಿಲ್ಲಾಡಳಿತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿತು.

ಪ್ರೊಬೇಷನರಿ ಐಎಎಸ್ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ಕರ್ನಾಟಕದಲ್ಲಿ ಬೆಂಗಳೂರು ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ಮೂಲಕ ವಿದೇಶಗಳಿಂದ ಪ್ರಯಾಣಿಕರು ಆಗಮಿಸಲಿದ್ದಾರೆ. ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮಾರ್ಗದರ್ಶಿಯಂತೆ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲಾಗುತ್ತಿದೆ ಎಂದು ಹೇಳಿದರು.

ವಿದೇಶದಿಂದ ಆಗಮಿಸುವ ಎಲ್ಲಾ ಪ್ರಯಾಣಿಕರನ್ನು ವಿಮಾನನಿಲ್ದಾಣದಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿ, ಗಂಟಲ ದ್ರವ ಮಾದರಿ ಸಂಗ್ರಹಿಸಲಾಗುವುದು. ಬಳಿಕ ಅವರನ್ನು ನಿಗಾವಣೆ ಕೇಂದ್ರಗಳಿಗೆ ಕಳುಹಿಸಲಾಗುವುದು. ಇದಕ್ಕಾಗಿ ನಗರದ ವಿವಿಧ ವಸತಿಗೃಹಗಳನ್ನು ಕ್ವಾರೆಂಟೈನ್ ಕೇಂದ್ರಗಳನ್ನಾಗಿ ಗುರುತಿಸಲಾಗುವುದು. ಪ್ರತೀ ಕೇಂದ್ರಕ್ಕೆ ನೋಡಲ್ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಅವರು ಹೇಳಿದರು. ವಸತಿಗೃಹದ ವೆಚ್ಚವನ್ನು ವಿದೇಶದಿಂದ ಬಂದ ಪ್ರಯಾಣಿಕರೇ ಭರಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ಆರೋಗ್ಯ ಸಚಿವಾಲಯದ ಎಲ್ಲಾ ಮಾರ್ಗದರ್ಶಿಗಳನ್ನು ವಸತಿಗೃಹಗಳು ಪಾಲಿಸಬೇಕು ಎಂದು ಅವರು ತಿಳಿಸಿದರು. ವಸತಿಗೃಹಗಳಿಗೆ ಸಮಾನವಾದ ಶಿಷ್ಟಾಚಾರಗಳನ್ನು ಶೀಘ್ರವೇ ನಿಗದಿಪಡಿಸಲಾಗುವುದು ಎಂದು ರಾಹುಲ್ ಶಿಂಧೆ ತಿಳಿಸಿದರು.

ಸಭೆಯಲ್ಲಿ ಮಹಾನಗರಪಾಲಿಕೆ ಪರಿಸರ ಅಭಿಯಂತರ ಮಧು, ನಗರದ ವಿವಿಧ ಲಾಡ್ಜ್‍ಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Comments are closed.