ಕರಾವಳಿ

ದ.ಕ.ಜಿಲ್ಲೆಯಲ್ಲಿಂದು 8 ಮಂದಿಯಲ್ಲಿ ಸೋಂಕು ಪತ್ತೆ- ರಾಜ್ಯದಲ್ಲಿ 204 ಮಂದಿಗೆ ಪಾಸಿಟಿವ್

Pinterest LinkedIn Tumblr

ಮಂಗಳೂರು, ಜೂನ್. 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಎಂಟು ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕರ್ನಾಟಕದಲ್ಲಿ ಇಂದು ಮತ್ತೆ ಒಂದೇ ದಿನ ಬರೋಬ್ಬರಿ 204 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರಾಜ್ಯದಲ್ಲಿ ಮಂಗಳವಾರ ಒಂದೇ ದಿನ 204 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿ 8 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಾಗಿ ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 7,734ಕ್ಕೆ ಏರಿಕೆಯಾಗಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 55, ಯಾದಗಿರಿ 37, ಬಳ್ಳಾರಿ 29, ಕಲಬುರಗಿ 19, ಬೀದರ್ 12, ದಕ್ಷಿಣ ಕನ್ನಡ, ಧಾರವಾಡದಲ್ಲಿ ತಲಾ 8, ಮಂಡ್ಯ 7, ಹಾಸನ 5, ಉಡುಪಿ, ಬಾಗಲಕೋಟೆ ಮತ್ತು ಶಿವಮೊಗ್ಗದಲ್ಲಿ ತಲಾ 4, ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಉತ್ತರ ಕನ್ನಡದಲ್ಲಿ ತಲಾ 3, ಮೈಸೂರು, ಬೆಂಗಳೂರು ಗ್ರಾಮಾಂತರ ಮತ್ತು ರಾಯಚೂರಿನಲ್ಲಿ ತಲಾ 1 ಒಂದು ಪ್ರಕರಣ ಪಾಸಿಟಿವ್ ಬಂದಿದೆ.

ರಾಜ್ಯದಲ್ಲಿ ಇಂದು ಕೊರೋನಾಗೆ ಎಂಟು ಬಲಿ :

ಬೆಂಗಳೂರು ನಗರ ಜಿಲ್ಲೆಯಲ್ಲಿ ಐದು ಮತ್ತು ಬೀದರ್, ಬಳ್ಳಾರಿ, ಶಿವಮೊಗ್ಗ ಜಿಲ್ಲೆಯಲ್ಲಿ ತಲಾ ಒಂದು ಸಾವು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 102ಕ್ಕೆ ಏರಿದೆ. ಒಟ್ಟಾರೆ ರಾಜ್ಯದಲ್ಲಿ 7,734 ಕೊರೋನ ಸೋಂಕಿತರ ಪೈಕಿ 4, 804 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 348 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2824 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Comments are closed.