ಕರಾವಳಿ

ಕರಾವಳಿಯ ಕಡಲತೀರದಲ್ಲಿ ಪುಡ್ ಪಾರ್ಕ್, ಆಧುನಿಕ ಮೂಲ ಸೌಕರ್ಯದೊಂದಿಗೆ ಪ್ರವಾಸೋದ್ಯಮ ಅಭಿವೃದ್ಧಿಗೆ ಚಿಂತನೆ

Pinterest LinkedIn Tumblr

ಮಂಗಳೂರು ಜುಲೈ 04 : ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರಿಕೆಯ ವಿವಿಧ ರೀತಿಯ ಅಭಿವೃದ್ಧಿ ಆಯಾಮಗಳ ಬಗ್ಗೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಕಾರ್ಯಕ್ರಮ ರೂಪಿಸುವಂತೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಇವರು ಅಧಿಕಾರಿಗಳಿಗೆ ಕರೆ ನೀಡಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಸುಸ್ಥಿರ ಅಭಿವೃದ್ಧಿ ಗುರಿಗಳು 14 ಮತ್ತು 15 ರಡಿಯಲ್ಲಿ ಯೋಜನೆಗಳನ್ನು ರೂಪಿಸುವ ಬಗ್ಗೆ ಮೀನುಗಾರಿಕೆ ಮತ್ತು ಪ್ರವಾಸೋದ್ಯಮ ಇಲಾಖೆಗಳೊಡನೆ ಮಾತನಾಡುತ್ತಾ, ಮೀನುಗಾರಿಕಾ ಬಂದರಿನಲ್ಲಿ ಮೂಲ ಸೌಲಭ್ಯ ಕಲ್ಪಿಸುವುದು, ಮೀನು ಉತ್ಪನ್ನ ಜಾಸ್ತಿಗೊಳಿಸುವ ಕುರಿತು ಒಳನಾಡು ಮೀನುಗಾರಿಕೆ ಕೈಗೊಳ್ಳವುದು, ಸಮುದ್ರ ಉತ್ಪನ್ನಗಳ ರಪ್ತು ದ್ವಿಗುಣಗೊಳಿಸುವುದು, ಪುಡ್ ಪಾರ್ಕ್‍ಗಳು, ಆಹಾರ ಭದ್ರತೆ ಮತ್ತು ಆಧುನಿಕ ಮೂಲ ಸೌಕರ್ಯ ಒದಗಣೆ ಹಾಗೂ ಕಡಲತೀರದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸುವ ಬಗ್ಗೆ ಚರ್ಚಿಸಿದರು.

ಜೊತೆಗೆ ತಲಪಾಡಿಯಿಂದ ಉತ್ತರ ಕನ್ನಡ ಜಿಲ್ಲೆಯ ಮಾಜಾಳಿ ವರೆಗಿನ ಮೀನುಗಾರಿಕಾ ರಸ್ತೆಯನ್ನು ಅಭಿವೃದ್ಧಿಪಡಿಸುವ ಕುರಿತು ಈಗಾಗಲೇ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಡಿಪಿಆರ್ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಸದ್ರಿ ರಸ್ತೆಯ ಅಭಿವೃದ್ಧಿಯಿಂದ ಮೀನುಗಾರ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್‍ಪಾಲ್ ಸುವರ್ಣ, ಮೀನುಗಾರಿಕಾ ವಿಶ್ವವಿದ್ಯಾಲಯದ ಡೀನ್ ಡಾ. ಎ. ಸೆಂಥಿಲ್‍ವೇಲ್, ಮೀನುಗಾರಿಕಾ ಉಪನಿರ್ದೇಶಕ ಪಾಶ್ವನಾಥ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಉದಯ ಶೆಟ್ಟಿ, ಮಂಗಳೂರು ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು, ಮೀನುಗಾರಿಕಾ ಅಭಿವೃದ್ಧಿ ನಿಗಮ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ಧರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿ ಸೋಜ ಕಾರ್ಯಕ್ರಮವನ್ನು ಸ್ವಾಗತಿಸಿದರು.

Comments are closed.