ಮಂಗಳೂರು, ಆಗಸ್ಟ್. 10 : ಕಾಲಿನಲ್ಲಿಯೇ ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಸುದ್ಧಿಯಾಗಿದ್ದ ಬಂಟ್ವಾಳ ನಿವಾಸಿ ಕೌಶಿಕ್ 424 ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಅಂಗವೈಕಲ್ಯತೆಗೆ ಸೆಡ್ಡುಹೊಡೆದು ಕಾಲಿನಲ್ಲಿಯೇ ಪರೀಕ್ಷೆ ಬರೆಯುವ ಮೂಲಕ ಶಿಕ್ಷಣ ಸಚಿವರ ಮೆಚ್ಚುಗೆ ಗಳಿಸಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಕೌಶಿಕ್ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ವ್ಯಾಪಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಬಂಟ್ವಾಳ ದ ಕಂಚಿಕಾರ ಪೇಟೆ ರಾಜೇಶ್ ಆಚಾರ್ಯ ಮತ್ತು ಜಲಜಾಕ್ಷಿ ಆಚಾರ್ಯ ಅವರ ಎರಡನೇ ಮಗನಾದ ಕೌಶಿಕ್, ಹುಟ್ಟಿನಿಂದಲೇ ಅಂಗವೈಕಲ್ಯತೆಯನ್ನು ಹೊಂದಿದ್ದು, ತಮ್ಮ ಮನೆ ಪರಿಸ್ಥಿತಿಯ ಕಷ್ಟ, ತೊಂದರೆಗಳನ್ನು ಲೆಕ್ಕಿಸದೇ. ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕು ಎಂಬ ಉತ್ಸಾಹದಿಂದ ಪರೀಕ್ಷೆಗೆ ಹಾಜರಾಗಿ ಯಾರ ಸಹಾಯವೂ ಇಲ್ಲದೆ ಕಾಲಿನಲ್ಲಿ ಪರೀಕ್ಷೆ ಬರೆಯುವ ಮೂಲಕ ಮಾದರಿಯಾಗಿದ್ದರು.
ಕೌಶಿಕ್ ಕಾಲಿನಲ್ಲಿ ಪರೀಕ್ಷೆ ಬರೆದಿರುವ ಮಾಹಿತಿ ಲಭಿಸುತ್ತಿದ್ದಂತೆ ಖುದ್ದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಕೌಶಿಕ್ನನ್ನು ಹೊಗಳಿ ಟ್ವೀಟ್ ಮಾಡಿದ್ದರು.
ಅನ್ಯ ಚಟುವಟಿಕೆಗಳಲ್ಲಿಯೂ ಗುರುತಿಸಿಕೊಂಡಿರುವ ಕೌಶಿಕ್ ಬಂಟ್ವಾಳ ಎಸ್.ವಿ.ಎಸ್.ಕನ್ನಡ ಮಾದ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದಾರೆ. ಒಂದನೇ ತರಗತಿಯಿಂದಲೇ ಕಾಲಿನ ಬೆರಳಿನ ಮೂಲಕ ಪರೀಕ್ಷೆ ಬರೆಯಲು ಅಭ್ಯಾಸ ಮಾಡಿದ್ದರು.
Comments are closed.