ಮಂಗಳೂರು, ಡಿಸೆಂಬರ್.06: ಕಂಟೈನರ್ ವಾಹನಕ್ಕೆ ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ಮಧ್ಯಾಹ್ನ ನಗರದ ಪಡೀಲ್ ಸಮೀಪ ನಡೆದಿದೆ.
ಬೈಕ್ ಸವಾರ ನೀರುಮಾರ್ಗದ ಮನ್ವಿತ್(22) ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ರವಿವಾರ ಮಧ್ಯಾಹ್ನ ಸುಮಾರು 11:45ರ ವೇಳೆಗೆ ಈ ಘಟನೆ ಸಂಭವಿಸಿದೆ. ಕಂಟೈನರ್ ನಂತೂರು ಕಡೆಯಿಂದ ಪಡೀಲ್ನತ್ತ ಸಂಚರಿಸುತ್ತಿತ್ತು. ಈ ವೇಳೆ ಎದುರುಗಡೆಯಿಂದ ಬಂದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಕಂಟೈನರ್ ಅಡಿಗೆ ಬಿದ್ದಿದೆ ಎನ್ನಲಾಗಿದೆ.
ಈ ವೇಳೆ ಕಂಟೈನರ್ ಬೈಕ್ ಮೇಲೆ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.