ಕರಾವಳಿ

ಮಂಗಳೂರಿನ ಎಲ್ಲಾ ಬೀಚ್ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ

Pinterest LinkedIn Tumblr

ಮಂಗಳೂರು ಡಿಸೆಂಬರ್ 30 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸರ್ಕಾರದ ನಿರ್ದೇಶನದಂತೆ, ಜಿಲ್ಲಾಡಳಿತವು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಪ್ರಸ್ತುತ ಯುನೈಟೆಡ್ ಕಿಂಗ್‍ಡಮ್‍ನಲ್ಲಿ ಹೊಸದಾಗಿ ರೂಪಾಂತರಗೊಂಡಿರುವ SARS-CoV2 ವೈರಾಣು ಪತ್ತೆಯಾಗಿದ್ದು, ತೀವ್ರ ಗತಿಯಲ್ಲಿ ಹರಡಿ ಬೆಳವಣಿಗೆ ಹೊಂದುತ್ತಿದೆ. ಅಲ್ಲದೇ ಯುನೈಟೆಡ್ ಕಿಂಗ್‍ಡಮ್‍ನಿಂದ ರಾಜ್ಯಕ್ಕೆ ಇತ್ತೀಚೆಗೆ ಆಗಮಿಸಿರುವ ಪ್ರಯಾಣಿಕರಲ್ಲಿ ಕೋವಿಡ್-19 ಪಾಸಿಟಿವ್ ಇರುವುದು ಕಂಡು ಬಂದಿದೆ.

ಈ ಹಿನ್ನೆಲೆಯಲ್ಲಿSARS-CoV2 ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಹೊಸವರ್ಷ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಕಡಲ ತೀರ ಪ್ರದೇಶಗಳಲ್ಲಿ ಅತೀ ಹೆಚ್ಚು ಜನಸಂದಣಿ ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಬೀಚ್‍ಗಳಿಗೆ/ ಎಲ್ಲಾ ಕಡಲ ಕಿನಾರೆಗಳಿಗೆ ಡಿಸೆಂಬರ್ 31ರಂದು ಮಧ್ಯಾಹ್ನ 12 ಗಂಟೆಯಿಂದ ಜನವರಿ 2 ರಂದು ಮಧ್ಯಾಹ್ನ 12 ಗಂಟೆಯವರೆಗೆ ಸ್ಥಳೀಯ ಹಾಗೂ ಸಾಂಪ್ರದಾಯಿಕ ಮೀನುಗಾರರನ್ನು ಹೊರತು ಪಡಿಸಿ ಇತರೇ ಯಾವುದೇ ಪ್ರವಾಸಿಗರು ಹಾಗೂ ಸಾರ್ವಜನಿಕರು ಪ್ರವೇಶಿಸುವುದನ್ನು ವಿಪತ್ತು ನಿರ್ವಹಣಾ ಕಾಯ್ದೆ-2005 ರ ಕಲಂ (34) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

Comments are closed.