ಕರಾವಳಿ

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತೆ ವಹಿಸಿ : ಜಿಲ್ಲಾಧಿಕಾರಿ

Pinterest LinkedIn Tumblr

ಮಂಗಳೂರು ಡಿಸೆಂಬರ್ 31 : ನಗರಗಳಲ್ಲಿ ಮಳೆ ನೀರು ಕೊಯ್ಲು (ನೀರು ಇಂಗಿಸುವ) ವ್ಯವಸ್ಥೆ ಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಅಂತರ್ಜಲವನ್ನು ಹೆಚ್ಚಿಸಲು ಮುಂದಾಗಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು.

ಅವರು ತಮ್ಮ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆಯನ್ನುದ್ದೇಶಿಸಿ ಮಾತನಾಡಿ, ಈಗಾಗಲೇ ಕಟ್ಟಡ, ಬಹಮಹಡಿ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆಯಿದ್ದು, ಇವುಗಳಲ್ಲಿ ಸಮರ್ಪಕವಾಗಿ ನೀರು ಇಂಗಿಸುವ ಪ್ರಕ್ರಿಯೆ ಆಗುತ್ತಿದೆಯೇ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಬೇಕು. ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆಯನ್ನು ರೂಪಿಸುವವರಿಗೆ ಮಾತ್ರ ಕಟ್ಟಡ ಪರವಾನಿಗೆಯನ್ನು ನೀಡಬೇಕು ಎಂದರು.

ಮುಂಬರುವ ಬೇಸಿಗೆಯಲ್ಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಲಭ್ಯವಿರುವ ಪರ್ಯಾಯ ನೀರಿನ ಮೂಲಗಳನ್ನು ಸಂರಕ್ಷಿಸಿ, ಪುನರುಜ್ಜೀವನಗೊಳಿಸಬೇಕು ಎಂದ ಅವರು, ಪೈಪ್ ಲೈನ್ ಅಳವಡಿಕೆ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಶೀಘ್ರದಲ್ಲಿ ಕೈಗೊಂಡು ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಬೇಕು.

ಜಲ ಸಂರಕ್ಷಣೆಯ ಕುರಿತು ಗ್ರಾಮ, ತಾಲೂಕು ಹಾಗೂ ನಗರಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿಬೇಕು ಎಂದ ಅವರು, ಅನವಶ್ಯಕವಾಗಿ ನೀರನ್ನು ಪೋಲು ಮಾಡುವುದು, ಮಲಿನಗೊಳಿಸುವುದು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಪಾಲಿಕೆಯ ವ್ಯಾಪ್ತಿಯಲ್ಲಿರುವ ಬೋರ್‍ವೆಲ್‍ಗಳು, ಓವರ್ ಹೆಡ್ ಟ್ಯಾಂಕ್‍ಗಳಲ್ಲಿ ಶೇಖರಣೆ ಆಗುವ ನೀರಿನ ಪ್ರಮಾಣದ ಮಾಹಿತಿ ಪಡೆದು ಮಾತನಾಡಿ, ಸಾರ್ವಜನಿಕರಿಗೆ ಹಾಗೂ ಉದ್ಯಮಿಗಳಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ವ್ಯಾಪ್ತಿಯಲ್ಲಿರುವ ಬೋರ್‍ವೆಲ್‍ಗಳ ಸಂಖ್ಯೆ ಅವುಗಳಲ್ಲಿರುವ ನೀರಿನ ಲಭ್ಯತೆಯನ್ನು ಮಾಹಿತಿ ಪಡೆದು ಮಾತನಾಡಿ, ಅವಶ್ಯವಿರುವ ದುರಸ್ತಿ ಕಾರ್ಯಗಳನ್ನು ಶೀಘ್ರದಲ್ಲಿ ಕೈಗೊಳ್ಳಬೇಕು ಎಂದು ಅಧಿಕಾರಿಗಳು ಎಂದರು.

ಸಭೆಯಲ್ಲಿ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಗಾಯತ್ರಿ ಎಸ್. ನಾಯಕ್, ಪಾಲಿಕೆಯ ಉಪ ಆಯುಕ್ತ ಡಾ. ಸಂತೋಷ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Comments are closed.