ಕರಾವಳಿ

10ನೇ ತರಗತಿಯ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ವೈದ್ಯಕೀಯ ನೆರವು ಹಾಗು ವಿವಿಧ ವಿನಾಯಿತಿ/ಸೌಲಭ್ಯ

Pinterest LinkedIn Tumblr

ಮಂಗಳೂರು : ಕೋವಿಡ್-19 ಕಾರಣದಿಂದಾಗಿ ವಿಶೇಷ ಅಗತ್ಯವುಳ್ಳ 10ನೇ ತರಗತಿ ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆಯಿಂದ ಪರೀಕ್ಷೆಗೆ ಒಳಗಾಗಿ ವೈದ್ಯಕೀಯ ಪ್ರಮಾಣ ಪತ್ರವನ್ನು ಸಕಾಲದಲ್ಲಿ ಪಡೆಯಲು ಸಾಧ್ಯವಾಗಿರಲಿಲ್ಲ. ಈ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿವಿಧ ವಿನಾಯಿತಿ/ಸೌಲಭ್ಯಗಳನ್ನು ನೀಡಲು ಅವಕಾಶವಿರುತ್ತದೆ.

2021ರ ಎಸ್.ಎಸ್.ಎಲ್.ಸಿ. ಪರೀಕ್ಷಾ ನೋಂದಣಿ ಫೆಬ್ರವರಿ 1ರಿಂದ 15ರವರೆಗೆ ಕಾಲಾವಕಾಶ ನೀಡಲಾಗಿದ್ದು, ಈ ಸೀಮಿತ ಅವಧಿಯಲ್ಲಿ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳು ಜಿಲ್ಲಾ ವೈದ್ಯಾಧಿಕಾರಿಗಳಿಂದ ವೈದ್ಯಕೀಯ ಪ್ರಮಾಣ ಪತ್ರ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುತ್ತದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮುತುವರ್ಜಿಯಿಂದ ಜಿಲ್ಲಾ ವ್ಯಾಪ್ತಿಯ ಪ್ರೌಢ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಕಲಿಯುತ್ತಿರುವ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಜಿಲ್ಲಾ ವೆನ್‌ಲಾಕ್ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಇತ್ತೀಚಿಗೆ ಎರಡು ದಿನಗಳ ವೈದ್ಯಕೀಯ ಶಿಬಿರವನ್ನು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಜಿಲ್ಲಾ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ 02ಮನಃಶಾಸ್ತ್ರಜ್ಞರು, 02-ನೇತ್ರ ತಜ್ಞರು, 01-ಕಿವಿ, ಮೂಗು, ಗಂಟಲು ತಜ್ಞರು, 01-ಮಕ್ಕಳ ತಜ್ಞರು, 01-ಮೂಳೆ ತಜ್ಞರು, 04-ಮನೋವೈದ್ಯರು, ಒಟ್ಟು 11 ವೈದ್ಯರ ತಂಡ ಶಿಬಿರದಲ್ಲಿ ಭಾಗವಹಿಸಿದ್ದರು.

ಶಿಬಿರಕ್ಕೆ ನೋಂದಣಿಯಾಗಿ ಪ್ರಯೋಜನ ಪಡೆದುಕೊಂಡ ವಿದ್ಯಾರ್ಥಿಗಳ ವಿವರ:
ಕ್ರ.ಸಂ.,  ವಲಯ,  ವಿದ್ಯಾರ್ಥಿಗಳ ಸಂಖ್ಯೆ
1 ಬಂಟ್ವಾಳ 44
2ಬೆಳ್ತಂಗಡಿ 22
3 ಮಂಗಳೂರು ಉತ್ತರ 123
4 ಮಂಗಳೂರು ದಕ್ಷಿಣ 111
5 ಮೂಡಬಿದ್ರೆ 18
6 ಪುತ್ತೂರು 47
7 ಸುಳ್ಯ 9
ಒಟ್ಟು 374.

ಈ ಪ್ರಮಾಣ ಪತ್ರ ಪಡೆದುಕೊಂಡವರಿಗೆ ನಿಯಮಾನುಸಾರ ಮುಂಬರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಭಾಷಾ ವಿನಾಯಿತಿ, ವಿಷಯ ವಿನಾಯಿತಿ, ಓದುಗಾರರ/ಬರಹಗಾರರ ಸೌಲಭ್ಯ, ಹೆಚ್ಚುವರಿ ಸಮಯದ ಸೌಲಭ್ಯ ಇತ್ಯಾದಿಗಳನ್ನು ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Comments are closed.