ಕರಾವಳಿ

ಕೇರಳ ಸೇರಿದಂತೆ ಹೊರ ರಾಜ್ಯಗಳಿಂದ ದ.ಕ. ಜಿಲ್ಲೆಗೆ ಆಗಮಿಸುವವರಿಗೆ RT-PCR ನೆಗೆಟಿವ್ ವರದಿ ಕಡ್ಡಾಯ: ಜಿಲ್ಲಾಧಿಕಾರಿ

Pinterest LinkedIn Tumblr

ಮಂಗಳೂರು ಮಾರ್ಚ್ 15 : ಕೇರಳದಿಂದ ಜಿಲ್ಲೆಗೆ ಆಗಮಿಸುವ ಪ್ರತೀಯೊಬ್ಬರು 72 ಗಂಟೆಯೊಳಗೆ ನಡೆಸಲಾದ RT-PCR ನೆಗೆಟಿವ್ ಪರೀಕ್ಷಾ ವರದಿಯನ್ನು ಹೊಂದಿರುವುದು ಕಡ್ಡಾಯವಾಗಿದೆ ಹಾಗೂ RAT ಪರೀಕ್ಷಾ ವರದಿಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಹೊರ ರಾಜ್ಯದಿಂದ ಆಗಮಿಸುವವರಿಗೆ ವಿಶೇಷ ಸರ್ವೇಕ್ಷಣಾ ಕ್ರಮಗಳನ್ನು ಕೈಗೊಳ್ಳುವ ಕುರಿತು ನಡೆದ ವೀಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದಿಂದ ಆಗಮಿಸುವ ವ್ಯಕ್ತಿಗಳು RT-PCR ನೆಗೆಟಿವ್ ಪರೀಕ್ಷಾ ವರದಿಯನ್ನು ಹೊಂದುವುದು ಕಡ್ಡಾಯಗೊಳಿಸುವಂತೆ ಹೇಳಿದರು.

ಜಿಲ್ಲೆಯ ಗಡಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿ ಸಾರ್ವಜನಿಕರು ವಿರಳವಾಗಿ ಸಂಚರಿಸುವ ರಸ್ತೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಅನಾವಶ್ಯಕ ರಸ್ತೆಗಳನ್ನು ಮುಚ್ಚುವಂತೆ ಹೇಳಿದ ಅವರು ತಾಲೂಕುವಾರು ಚೆಕ್ ಪೋಸ್ಟ್‍ಗಳೊಂದಿಗೆ ಹೆಚ್ಚುವರಿ ಚೆಕ್‍ಪೋಸ್ಟ್ ಗಳನ್ನು ತೆರೆಯಬೇಕು ಎಂದರು.

ಹೊರರಾಜ್ಯಗಳಿಂದ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡುವುದರೊಂದಿಗೆ 15 ದಿನಗಳಿಗೊಮ್ಮೆ ಪರೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಒಂದು ವೇಳೆ ವಿದ್ಯಾರ್ಥಿಗಳು ತಮ್ಮ ಸ್ವಂತ ಊರಿಗೆ ಹೋದಂತಹಾ ಸಂದರ್ಭದಲ್ಲಿ ಮರಳಿ ಜಿಲ್ಲೆಗೆ ಬರುವಾಗ ಕಡ್ಡಾಯವಾಗಿ ನೆಗೆಟಿವ್ ಪರೀಕ್ಷಾ ವರದಿಯನ್ನು ತರಬೇಕು ಹಾಗೂ ಅವರ ಜೊತೆಗೆ ಜಿಲ್ಲೆಗೆ ಆಗಮಿಸುವ ಪೋಷಕರು ನೆಗೆಟಿವ್ ವರದಿಯನ್ನು ತರಬೇಕು ಎಂದು ಹೇಳಿದರು.

ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಸ್ವಯಂ ಮೇಲ್ವಿಚಾರಣೆ ನಡೆಸಿಕೊಂಡು ಜ್ವರ, ಶೀತ, ಕೆಮ್ಮು, ಗಂಟಲು ನೋವು, ಉಸಿರಾಟದ ಸಮಸ್ಯೆ ಹಾಗೂ ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ವೈಧ್ಯಕೀಯ ನೆರವು ಪಡೆಯಬೇಕು ಹಾಗೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಅರಿವು ಮೂಡಿಸಬೇಕು ಎಂದರು.

ಜಿಲ್ಲೆಯಲ್ಲಿ ಹೆಚ್ಚು-ಹೆಚ್ಚು ಕೋವಿಡ್ ಟೆಸ್ಟ್‍ಗಳನ್ನು ಮಾಡುವುದರೊಂದಿಗೆ ರೋಗಿಗಳನ್ನು ಗುರುತಿಸಿ ಅವರಿಗೆ ಚಿಕಿತ್ಸೆ ನೀಡಬೇಕು. ಅಲ್ಲದೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚುವ ಕಾರ್ಯ ಚುರುಕುಗೋಳಿಸಬೇಕು ಎಂದರು. ಪ್ರತಿಯೊಬ್ಬ ನಾಗರಿಕನೂ ತಪ್ಪದೇ ಮಾಸ್ಕ್ ಧರಿಸಿಕೊಳ್ಳುವುದರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಕೈಗಳ ಸ್ವಚ್ಛತೆಗೆ ಆಧ್ಯತೆ ನೀಡಬೇಕು ಎಂದರು.

ಗ್ರಾಮ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್‍ಗಳು ರಚನೆಗೊಂಡಿದ್ದು, ತಾಲೂಕು ಮಟ್ಟದಲ್ಲೂ ವಾರ್ಡ್ ಮಟ್ಟದ ಟಾಸ್ಕ್ ಫೋರ್ಸ್ ರಚನೆಯಾಗುವುದರೊಂದಿಗೆ ಎಲ್ಲಿ ILI & SARI ಪ್ರಕರಣಗಳು ಇವೆ ಎಂಬುದರ ಬಗ್ಗೆ ಮಾಹಿತಿ ಪಡೆಯಬೇಕು. ವ್ಯಾಕ್ಸಿನೇಷನ್ ಬಗ್ಗೆಯೂ ತಾಲೂಕು ಆರೋಗ್ಯ ಅಧಿಕಾರಿಗಳು, ತಹಶಿಲ್ದಾರರುಗಳು ಸೇರಿ ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ಸಾರ್ವಜನಿಕರ ನೆರವು ಪಡೆದುಕೊಂಡು ಮಾಹಿತಿ ಹಾಗೂ ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು.

ಗ್ರಾಮ ಪಂಚಾಯತ್‍ನ ಟಾಸ್ಕ್ ಫೋರ್ಸ್‍ಗಳಲ್ಲಿ ಪ್ರತೀ ಶನಿವಾರ ಸಭೆ ನಡೆಸಿ ಕೋವಿಡ್ ನ 2ನೇ ಅಲೆ ಸಂಭವಿಸದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಮಾರ್ಗಸೂಚಿಗಳ ಬಗ್ಗೆ ಚರ್ಚಿಸಬೇಕು. ಹಾಗೂ ಸಾರ್ವಜನಿಕರಿಗೆ ವ್ಯಾಕ್ಸಿನೇಷನ್ ತೆಗೆದುಕೊಳ್ಳಲು ಉತ್ತೇಜನ ನೀಡುವುದರೊಂದಿಗೆ ಇದರಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ ಎಂಬುದರ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಮಾತನಾಡಿ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಹಾಗೂ ನಗರ ಸ್ಥಳೀಯ, ಸಂಸ್ಥೆಗಳ ಮಟ್ಟದಲ್ಲಿ ಈಗಾಗಲೇ ರಚಿಸಲಾಗಿರುವ ಟಾಸ್ಕ್‍ಫೋರ್ಸ್ ಸಮಿತಿಗಳು ಆಗಿಂದಾಗೆ ಸಭೆ ನಡೆಸುವುದರೊಂದಿಗೆ ಕೋವಿಡ್ ಸೊಂಕು ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಕೇರಳ ಜಿಲ್ಲೆಯಲ್ಲಿ ಕರೊನಾ ಪ್ರಕರಣಗಳು ಹೇಚ್ಚಾಗಿವೆ ಈ ಹಿನ್ನಲೆಯಲ್ಲಿ ಜಿಲ್ಲೆಗೆ ಹೊಂದಿಕೊಂಡಿರುವ ಚೆಕ್‍ಪೋಸ್ಟ್‍ಗಳಲ್ಲಿ ಹಾಗೂ ಇನ್ನು ಹೆಚ್ಚಿನ ಅವಶ್ಯಕತೆ ಇರುವಲ್ಲಿ ನೂತನವಾಗಿ ಚೆಕ್‍ಪೋಸ್ಟ್‍ಗಳನ್ನು ನಿರ್ಮಾಣಮಾಡಿ ಪ್ರತಿಯೊಬ್ಬರ ಕೋವಿಡ್-19 ವರದಿಯನ್ನು ಪರಿಶೀಲಿಸಬೇಕು. ಅಲ್ಲದೆ ಪ್ರತಿದಿನ ದೈನಂದಿನ ಕೆಲಸಕಾರ್ಯಗಳಿಗೆ ಹಾಗೂ ವಿದ್ಯಾಭ್ಯಾಸಕ್ಕೆ ಸಂಚರಿಸುವವರ ಮಾಹಿತಿಯನ್ನು ಕ್ರೋಢೀಕರಿಸಿ ಕೊಂಡು ಕಡತದಲ್ಲಿ ನಮೂದಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ನಡೆಯುವ ಸಭೆ ಸಮಾರಂಭಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನ ಸೇರದಂತೆ ಕಂದಾಯ ಇಲಾಖೆ, ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಹಾಗೂ ಗ್ರಾಮಪಂಚಾಯತಿ ಅಧಿಕಾರಿಯವರು ನಿಗಾವಹಿಸಬೇಕು. ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿದರೆ ದಂಡ ವಿಧಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ, ಮಂಗಳೂರು ಮಹಾನಗರಪಾಲಿಕೆ ಆಯುಕ್ತರು (ಪ್ರಭಾರ) ದಿನೇಶ್ ಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಚಂದ್ರ ಬಾಯರಿ, ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪಾಪಾ ಭೋವಿ, ತಾಲೂಕು ಆರೋಗ್ಯಾಧಿಕಾರಿಗಳು, ತಹಶೀಲ್ದಾರರು ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.