ಕರಾವಳಿ

ಅಗತ್ಯ ವಸ್ತುಗಳ ಖರೀದಿ ಸಮಯ ವಿಸ್ತರಿಸುವಂತೆ‌ ಶಾಸಕರ ನಿಯೋಗದಿಂದ ಸಚಿವರಿಗೆ ಮನವಿ

Pinterest LinkedIn Tumblr

ಮಂಗಳೂರು, ಮೇ 12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್ ಡೌನ್ ನಿಂದ ಮಂಗಳೂರು ನಗರದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ನೀಡಿರುವ‌ ಸಮಯವನ್ನು ವಿಸ್ತರಿಸುವಂತೆ‌ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದ ನಿಯೋಗ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಕಾಮತ್, ಇಡೀ ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿದರೆ ವಾಣಿಜ್ಯ ವಹಿವಾಟುಗಳು ಹೆಚ್ಚಾಗಿ ನಡೆಯುವುದು ಮಂಗಳೂರಿನಲ್ಲೇ. ಹಾಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಸಾಮಾಗ್ರಿಗಳ ಖರೀದಿಗೆ ನೀಡಿರುವ ಸಮಯದ ಅವಧಿಯನ್ನು ಮಂಗಳೂರು ನಗರ ದಕ್ಷಿಣದಲ್ಲಿ ಒಂದು ಗಂಟೆ ವಿಸ್ತರಿಸಬೇಕು.

ಸದ್ಯ ಮುಂಜಾವಿನ 6 ಗಂಟೆಯಿಂದ 9 ಗಂಟೆಯ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯಾವಕಾಶ ನೀಡಲಾಗಿದೆ. ಆದರೆ ಮಂಗಳೂರು ನಗರದಲ್ಲಿ ಅಂಗಡಿ ಮುಗ್ಗಟ್ಟುಗಳು 7 ಗಂಟೆಯ ನಂತರವೇ ತೆರೆಯಲಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ತಡವಾಗುತ್ತಿದೆ.

ಹಾಗಾಗಿ ರಾಜ್ಯ ಸರಕಾರ ಜಾರಿಗೊಳಿಸಿರುವ ಲಾಕ್ ಡಾನ್ ನಿಯಮಾವಳಿಗಳನ್ನು ಮಂಗಳೂರಿಗೂ ಅನ್ವಯವಾಗುವಂತೆ ಆದೇಶ ಜಾರಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿಕೊಂಡಿದ್ದೇವೆ ಎಂದರು.

ಲಾಕ್ ಡೌನ್ ಸಂದರ್ಭದಲ್ಲಿ ಬ್ಯಾಂಕ್ ನೌಕರರು, ವಿವಿಧ‌ ಸವಲತ್ತುಗಳನ್ನು ಪಡೆಯಲು ಬ್ಯಾಂಕ್ ಅಥವ ಅಂಚೆ ಕಚೇರಿಗಳಿಗೆ ತೆರಳುವವರಿಗೆ, ಬೀಡಿ ಉದ್ಯಮಿಗಳಿಗೆ, ಬೀಡಿ ನೌಕರರಿಗೆ, ಹೋಟೆಲ್ ಕಾರ್ಮಿಕರು, ಕಟ್ಟಡ ಕಾರ್ಮಿಕರು ಸೇರಿದಂತೆ ಇತರ ವರ್ಗದ ಕಾರ್ಮಿಕರನ್ನು ಪರಿಶೀಲನೆ ನಡೆಸಿ ಓಡಾಟಕ್ಕೆ ಅನುಮತಿ ನೀಡಬೇಕು.

ಹಿರಿಯ ನಾಗರಿಕರಿಗೆ ನಡೆದುಕೊಂಡು ಸಾಮಾಗ್ರಿಗಳನ್ನು ತರಲು ಸಮಸ್ಯೆ ಉಂಟಾಗುತ್ತಿದೆ. ಹಾಗಾಗಿ ಹಿರಿಯ ನಾಗರಿಕರಿಗೆ ಸಾಮಾಗ್ರಿಗಳ ಖರೀದಿಗೆ ವಾಹನ ಬಳಸಲು ಅವಕಾಶ ಕಲ್ಪಿಸಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಹಂಚಿಕೆ ನಡೆಸಲು ಅವಕಾಶ ಕಲ್ಪಿಸಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಸಚಿವರು ಮನವಿ ಪರಿಶೀಲಿಸಿ ಆದೇಶ ನೀಡುವ ಭರವಸೆ ನೀಡಿದ್ದಾರೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ‌ ಅದ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಬಿಜೆಪಿ ಮುಖಂಡರಾದ ಸಂಜಯ್ ಪ್ರಭು, ವಸಂತ್ ಜೆ ಪೂಜಾರಿ ಉಪಸ್ಥಿತರಿದ್ದರು.

Comments are closed.