ಮಂಗಳೂರು, ಮೇ.17 : ತೌಕ್ತೆ ಚಂಡಮಾರುತದಿಂದ ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಅಪಾರ ಹಾನಿ ಉಂಟಾಗಿದ್ದು, ಇದರಿಂದ ನಷ್ಟ ಅನುಭವಿಸಿದವರಿಗೆ ಪರಿಹಾರ ನೀಡಲಾಗುವುದು” ಎಂದು ಕಂದಾಯ ಸಚಿವರಾದ ಆರ್. ಅಶೋಕ್ ಹೇಳಿದರು.
ಮನೆ ಹಾನಿಗೆ ಒಳಗಾದವರಿಗೆ ತಕ್ಷಣದ ಪರಿಹಾರವಾಗಿ 10 ಸಾವಿರ ವಿತರಿಸಲಾಗುತ್ತಿದೆ. ಭಾಗಶಃ ಹಾನಿಯಾದರೆ 1 ಲಕ್ಷ, ಪೂರ್ಣ ಹಾನಿಯಾಗಿದ್ದರೆ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದರು.
ತೌಕ್ತೆ ಚಂಡಮಾರುತದಿಂದ ದಕ್ಷಿಣ ಕನ್ನಡ. ಜಿಲ್ಲೆಯಲ್ಲಿ ವ್ಯಾಪಕ ಹಾನಿ ಸಂಭವಿಸಿದ್ದು, ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಆರ್. ಅಶೋಕ್ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ಚಂಡಮಾರುತದಿಂದ ಮನೆ ಸಂಪೂರ್ಣ ಕುಸಿದು ಬಿದ್ದಿದ್ದರೆ 5 ಲಕ್ಷ ಪರಿಹಾರ, ಭಾಗಶಃ ಹಾನಿಯಾಗಿದ್ದರೆ 1 ಲಕ್ಷ ಪರಿಹಾರ, ಅರಬ್ಬಿ ಸಮುದ್ರದ ಟಗ್ ಬೋಟ್ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಒದಗಿಸುವುದು. ಜತೆಗೆ ಚಂಡಮಾರುತದಿಂದ ತೊಂದರೆಗೊಳಗಾದ 182 ಕುಟುಂಬಗಳಿಗೆ ತಲಾ 10,000 ರೂಪಾಯಿ ಪರಿಹಾರ ಮನೆಗಳಿಗೆ ನೀಡುವುದಾಗಿ ಸಚಿವರು ತಿಳಿಸಿದರು.
ಹಾನಿಯ ಕುರಿತು ಅಂದಾಜು ಪಟ್ಟಿಯನ್ನು ಸಿದ್ಧಪಡಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲಾಡಳಿತದ ಬಳಿ ಒಟ್ಟು ₹106 ಕೋಟಿ ಲಭ್ಯವಿದ್ದು, ಮೂಲಸೌಕರ್ಯ ಅಭಿವೃದ್ಧಿ, ಪರಿಹಾರ ನೀಡಲು ಬಳಕೆ ಮಾಡುವಂತೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
Comments are closed.