
ಮಂಗಳೂರು : ಕೋವಿಡ್ ಸೋಂಕಿತರ ಆರೋಗ್ಯದ ಕುರಿತು ನಿಗಾ ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ಆರೋಗ್ಯದ ಕುರಿತು ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಂದರ್ ಆರೋಗ್ಯ ಕೇಂದ್ರದಲ್ಲಿ ಸಂಬಂಧಪಟ್ಟ ವಾರ್ಡ್` ಗಳ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಕ್ಕಾಗಿ ನಮ್ಮ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ತಮ್ಮ ಶಕ್ತಿ ಮೀರಿ ಪ್ರಯತ್ನಿಸುತಿದ್ದಾರೆ. ಸೋಂಕಿತರ ಆರೋಗ್ಯದ ಕುರಿತು ಕಾಳಜಿ ವಹಿಸುವ, ಮಾಹಿತಿ ಪಡೆಯುವ ಕೆಲಸವನ್ನು ಮಾಡುತಿದ್ದಾರೆ ಎಂದು ಶಾಸಕ ಕಾಮತ್ ಹೇಳಿದರು.

ಅಲ್ಪ ಪ್ರಮಾಣದಲ್ಲಿ ಕೋವಿಡ್ ಸೋಂಕಿನ ರೋಗ ಲಕ್ಷಣಗಳು ಕಂಡು ಬಂದರೆ ಪರೀಕ್ಷೆಗೊಳಪಡುವಂತೆ ಅವರಲ್ಲಿ ಮನವಿ ಮಾಡಿಕೊಳ್ಳಬೇಕು. ರೋಗ ಉಲ್ಬಣಗೊಂಡು ಪರಿಸ್ಥಿತಿ ಕೈ ಮೀರುವ ಹಂತದ ವರೆಗೂ ಕಾಯಬಾರದು. ಹಾಗೂ ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಕೋವಿಡ್ ಸೋಂಕು ಹರಡದಂತೆ ತಡೆಗಟ್ಟುವುದರೊಂದಿಗೆ ಡೆಂಗ್ಯೂ ಮಲೇರಿಯಾ ರೋಗದ ಕುರಿತು ಗಮನ ನೀಡಬೇಕು. ಸೊಳ್ಳೆ ಪರದೆ ವಿತರಣೆ ಅಥವ ಇನ್ನಿತರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷೆ ಲೀಲಾವತಿ ಪ್ರಕಾಶ್, ಪಾಲಿಕೆ ಸದಸ್ಯರಾದ ಪೂರ್ಣಿಮಾ ಎಂ, ಜಯಶ್ರೀ ಕುಡ್ವ, ಬಂದರ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Comments are closed.