ಕರ್ನಾಟಕ

ಲಾಕ್‌ಡೌನ್‌ ನಡುವೆ ರಸ್ತೆಯಲ್ಲಿ ಸಂಚರಿಸಿ ಜಪ್ತಿಯಾದ ವಾಹನ ದಂಡ ವಿಧಿಸಿ ಬಿಡುಗಡೆ ಮಾಡಲು ಹೈಕೋರ್ಟ್ ಅನುಮತಿ

Pinterest LinkedIn Tumblr

ಬೆಂಗಳೂರು: ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡಿದ ಕಾರಣ ಜಪ್ತಿಮಾಡಲಾಗಿರುವ ವಾಹನಗಳನ್ನು ದಂಡ ವಿಧಿಸಿ ಬಿಡುಗಡೆ ಮಾಡಲು ಸರ್ಕಾರಕ್ಕೆ ಹೈಕೋರ್ಟ್‌ ಅನುಮತಿ ನೀಡಿದೆ.

(ಸಾಂದರ್ಭಿಕ ಚಿತ್ರ)

ಮಧ್ಯಂತರ ಅರ್ಜಿ ಸಲ್ಲಿಸಿದ ರಾಜ್ಯ ಸರ್ಕಾರ, ಬಿಬಿಎಂಪಿ ವ್ಯಾಪ್ತಿಯಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ವಾಹನಗಳ ಬಿಡುಗಡೆಗೆ ಅನುಮತಿ ನೀಡಿ 2020ರ ಏ.30ರಂದು ಹೈಕೋರ್ಟ್‌ ಆದೇಶ ನೀಡಿದೆ. ಆ ಆದೇಶವನ್ನು ರಾಜ್ಯಾದ್ಯಂತ ವಿಸ್ತರಿಸಬೇಕು ಎಂದು ಕೋರಿತು. ಈ ಮನವಿ ಪುರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ಅವರ ನೇತೃತ್ವದ ವಿಭಾಗೀಯ ಪೀಠ, ದಂಡ ಪಾವತಿಸಿಕೊಂಡು ವಾಹನ ಬಿಡುಗಡೆ ಮಾಡಲು ಅನುಮತಿ ನೀಡಿ ಮಧ್ಯಂತರ ಅರ್ಜಿಯನ್ನು ಇತ್ಯರ್ಥಪಡಿಸಿತು. ರಾಜ್ಯಾದ್ಯಂತ ಒಂದೂವರೆ ಲಕ್ಷಕ್ಕೂ ಹೆಚ್ಚು ವಾಹನ ಜಪ್ತಿ ಮಾಡಲಾಗಿದೆ.

ವಿಚಾರಣೆ ವೇಳೆ ಸರ್ಕಾರಿ ವಕೀಲರು ವಾದಿಸಿ, ದ್ವಿಚಕ್ರ, ತಿಚಕ್ರ ಮತ್ತು ನಾಲ್ಕು ಚಕ್ರ ವಾಹನ ಸೇರಿದಂತೆ ಒಂದೂವರೆ ಲಕ್ಷಕ್ಕೂ ಹೆಚ್ಚು ವಾಹನಗಳನ್ನು ಜಫ್ತಿ ಮಾಡಲಾಗಿದೆ. ಈ ಎಲ್ಲ ವಾಹನಗಳ ಬಿಡುಗಡೆಗೆ ಕೋರಿ ಮಾಲೀಕರು ಮ್ಯಾಜಿಸ್ಪ್ರೇಟ್‌ ಕೋರ್ಟ್‌ ಮುಂದೆ ಹೋದರೆ ಜನಜಂಗುಳಿ ಏರ್ಪಡುತ್ತದೆ. ಅಷ್ಟು ಸಂಖ್ಯೆಯ ವಾಹನಗಳನ್ನು ನಿಲುಗಡೆ ಮಾಡಲು ಸ್ಥಳಾವಕಾಶದ ಕೊರತೆ ಉಂಟಾಗಿದೆ. ಹೀಗಾಗಿ, ದಂಡ ಪಾವತಿಸಿಕೊಂಡು ವಾಹನಗಳನ್ನು ಬಿಡುಗಡೆ ಮಾಡಲು ಅನುಮತಿ ನೀಡುವಂತೆ ಕೋರಿದರು.

Comments are closed.