ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರದ ಕುತೂಹಲಕ್ಕೆ ತೆರೆ ಬಿದ್ದಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರ ಹೆಸರು ಅಂತಿಮವಾಗಿದೆ. ಬಹುತೇಕ ನಾಳೆಯೇ ಅವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ದಟ್ಟವಾಗಿದೆ.
ಸಿಎಂ ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ರಾಜ್ಯದಲ್ಲಿ ನೂತನ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಇತ್ತು. ಮಾತ್ರವಲ್ಲ ಒಂದಷ್ಟು ಹೆಸರಗಳು ಕೂಡ ಕೇಳಿಬಂದಿತ್ತು. ಆದರೆ ಇದೀಗಾ ಎಲ್ಲದಕ್ಕೂ ತೆರೆಬಿದ್ದಂತಾಗಿದ್ದು ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಪುತ್ರ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ನೇಮಕ ಮಾಡುವ ನಿರ್ಧಾರಕ್ಕೆ ಹೈಕಮಾಂಡ್ ಬಂದಿದೆ. ಅಧೀಕೃತ ಘೋಷಣೆಯೂ ಆಗಿದೆ.
ನೂತನ ಮುಖ್ಯಮಂತ್ರಿಯ ಆಯ್ಕೆಯ ಕುರಿತು ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಹಂಗಾಮಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಚುನಾವಣಾ ವೀಕ್ಷಕರಾದ ರಾಕೇಶ್ ರೆಡ್ಡಿ, ಧರ್ಮೇಂದ್ರ ಪ್ರಧಾನ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದಾರೆ.
ಶಾಸಕಾಂಗ ಸಭೆಯಲ್ಲಿ ಬೊಮ್ಮಾಯಿ ಅವರ ಹೆಸರನ್ನು ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದು ಗೋವಿಂದ ಕಾರಜೋಳ ಅವರು ಅನುಮೋದಿಸಿದ್ದಾರೆ. ಕೊನೆಗೂ ಯಡಿಯೂರಪ್ಪ ಆಪ್ತವಲಯದಲ್ಲಿ ಗುರುತಿಸಿಕೊಂಡ ಬಸವರಾಜ್ ಬೊಮ್ಮಾಯಿ ನೂತನ ಸಿಎಂ ಆಗಲಿದ್ದಾರೆ.
Comments are closed.