ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ಭಾನುವಾರ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿಸಲಾಯಿತು. ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಹಾಗೂ ಸಾವಿರಾರು ಅಭಿಮಾನಿಗಳು ಪುನೀತ್ ಅವರಿಗೆ ಕಣ್ಣೀರಿನ ಮೂಲದ ಅಂತಿಮ ವಿದಾಯ ಹೇಳಿದರು. ಅಪಾರ ಸಂಖ್ಯೆಯ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಮುಂಭಾಗ ಜಮಾಯಿಸಿದ್ದರು.

ಹೃದಯ ಸ್ತಂಭನದಿಂದ ಅಕಾಲಿಕ ನಿಧನ ಹೊಂದಿರುವ ಪುನೀತ್ ಅವರು ತಂದೆ, ತಾಯಿ ಪಕ್ಕದಲ್ಲೇ ಇದೀಗ ಚಿರಸ್ಥಾಯಿಯಾಗಿದ್ದಾರೆ. ಮೂರು ವರ್ಷದ ಹಿಂದೆಯಷ್ಟೇ ಗೋವಿಂದ ನಾಮ ಸ್ಮರಣೆಯೊಂದಿಗೆ ದಾಸಯ್ಯನ ಪದ್ಧತಿಯಂತೆ ಪುನೀತ್ ರಾಜ್ ಕುಮಾರ್ ಅವರು ತಮ್ಮ ತಾಯಿಯ ಅಂತ್ಯ ಸಂಸ್ಕಾರ ನಡೆಸಿದ್ದರು.ಪುನೀತ್ ಅವರ ಅಂತ್ಯಸಂಸ್ಕಾರವು ಈಡಿಗ ಸಂಪ್ರದಾಯದಂತೆ ನೆರವೇರಿದ್ದು, ಕರುನಾಡಿನ ಯುವರತ್ನ ಭೂತಾಯಿ ಮಡಿಲು ಸೇರಿದ್ದಾರೆ.
ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪುನೀತ್ ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ ಹಾಗೂ ವಂದಿತಾ, ಸಹೋದರರಾದ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಕಣ್ಣೀರು ಹಾಕಿದ ದೃಶ್ಯ ಮನ ಕಲಕುವಂತಿತ್ತು. ಕಂಠೀರವ ಸ್ಟುಡಿಯೋ ಆವರಣದ ಒಳಗೆ ಕುಟುಂಬದವರಿಗೆ ಮತ್ತು ಗಣ್ಯರಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿತ್ತು.
ಸಿಎಂ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಮುನಿರತ್ನ, ರಾಕ್ಲೈಕ್ ವೆಂಕಟೇಶ್, ಕಿಚ್ಚ ಸುದೀಪ್, ರವಿಚಂದ್ರನ್ ಮೊದಲಾದವರು ಪುನೀತ್ಗೆ ಅಂತಿಮ ವಿಧಾಯ ಹೇಳಿದ್ದಾರೆ. ಡಾ. ರಾಜ್ಕುಮಾರ್ ಸಮಾಧಿಯಿಂದ 125 ಅಡಿ ಅಂತರ ಹಾಗೂ ಪಾರ್ವತಮ್ಮ ರಾಜ್ಕುಮಾರ್ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್ ರಾಜ್ಕುಮಾರ್ ಅವರ ಅಂತ್ಯಕ್ರಿಯೆ ಮಾಡಲಾಗಿದೆ.
ಇದಕ್ಕೂ ಮುನ್ನ ಬೆಳಗ್ಗೆ ನಾಲ್ಕು ಗಂಟೆಯಿಂದಲೇ ಕಂಠೀರವ ಸ್ಟೇಡಿಯಂನಿಂದ ಪುನೀತ್ ರಾಜ್ಕಮಾರ್ ಅಂತಿಮ ಯಾತ್ರೆ ನಡೆಯಿತು.
Comments are closed.