ಮಂಗಳೂರು: ಮಂಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಪರಾರಿ ಎಂಬಲ್ಲಿನ ರಾಜ್ ಟೈಲ್ಸ್ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ 8 ವರ್ಷದ ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಹಲವು ಮಂದಿ ಯುವಕರನ್ನು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, 8 ವರ್ಷದ ಬಾಲಕಿಯ ಹತ್ಯೆಯನ್ನು ಕಾರ್ಖಾನೆಯೊಳಗಿನ ಕಾರ್ಮಿಕರೇ ಎಸಗಿರುವ ಬಗ್ಗೆ ಅನುಮಾನವಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ವಿಚಾರಣೆಯ ಸಲುವಾಗಿ ಹಲವರನ್ನು ವಶಕ್ಕೆ ಪಡೆದು ತನಿಖೆ ಚುರುಕುಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಘಟನೆಯ ವಿವರ:
ರಾಜ್ ಟೈಲ್ಸ್ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ 8 ವರ್ಷದ ಬಾಲಕಿಯನ್ನು ಹತ್ಯೆಗೈದ ಘಟನೆ ನ.21ರ ಭಾನುವಾರ ಸಂಜೆ ಬೆಳಕಿಗೆ ಬಂದಿತ್ತು. ಗುರುಪುರ ಸೇತುವೆ ಬಳಿಯ ಪರಾರಿ ಕ್ರಾಸ್ನಲ್ಲಿ ರಾಜ್ ಟೈಲ್ಸ್ ಫ್ಯಾಕ್ಟರಿ ಇದ್ದು, ಅಲ್ಲಿ ಕರ್ನಾಟಕದ 10 ಮಂದಿ, ಉತ್ತರ ಭಾರತ ಮೂಲದ ಹಲವು ಯುವಕರು ಹಾಗೂ ನಾಲ್ಕೈದು ಮಹಿಳೆಯರು ಸೇರಿದಂತೆ 30ಕ್ಕೂ ಅಧಿಕ ಜನರು ಕೆಲಸ ಮಾಡುತ್ತಿದ್ದಾರೆ. ಇವರಲ್ಲಿ ಅಸ್ಸಾಂ ಮೂಲದ ಕುಟುಂಬದ ಮಹಿಳೆಯ 8 ವರ್ಷದ ಬಾಲಕಿ ನಾಪತ್ತೆಯಾಗಿದ್ದಳು. ಆಕೆಯನ್ನು ಹುಡುಕಾಡಿದಾಗ ಸಂಜೆ 6 ಗಂಟೆ ಸುಮಾರಿಗೆ ಕಾರ್ಖಾನೆಯ ಸಮೀಪದ ಮೋರಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿತ್ತು.
Comments are closed.