ಕರ್ನಾಟಕ

ರಾಜ್ಯದಲ್ಲಿ ಎಂಇಎಸ್ ನಿಷೇಧಕ್ಕೆ ಆಗ್ರಹ: ಬೆಳಗಾವಿಯಲ್ಲಿಂದು ಕನ್ನಡಿಗರ ಪ್ರತಿಭಟನೆ, ಸುವರ್ಣ ಸೌಧಕ್ಕೆ ಮುತ್ತಿಗೆ

Pinterest LinkedIn Tumblr

ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ದುಷ್ಕೃತ್ಯ ಮತ್ತು ಪುಂಡಾಟಿಕೆ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದಾರೆ.

ಸರ್ಕಾರಕ್ಕೆ ಸ್ಪಷ್ಟ ಸಂದೇಶ ನೀಡಲು, ಕನ್ನಡಿಗರನ್ನು, ಕನ್ನಡ ಭಾಷೆಯನ್ನು ಕೆಣಕುವವರ ವಿರುದ್ಧ ಹೋರಾಡಲು ವಿವಿಧ ಕನ್ನಡಪರ ಸಂಘಟನೆಗಳು ಬೆಳಗಾವಿ ಚಲೋ ನಡೆಸಲು ಮುಂದಾಗಿವೆ. ಇಂದು ಬೆಳಗಾವಿಯಲ್ಲಿ ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಕನ್ನಡ ಸಂಘದ ನಾರಾಯಣ ಗೌಡ ಬಣ ಮತ್ತು ಪ್ರವೀಣ್ ಶೆಟ್ಟಿ ಬಣಗಳು ನಿರ್ಧರಿಸಿವೆ. ಇದಕ್ಕೆ ರೈತ ಸಂಘಟನೆಗಳು, ಮಹಿಳಾ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದು ಸರ್ಕಾರದ ಜನ ಪ್ರತಿನಿಧಿಗಳು ಬೆಳಗಾವಿಯಲ್ಲಿ ಬೀಡುಬಿಟ್ಟಿದ್ದಾರೆ. ಈ ಹೊತ್ತಿನಲ್ಲಿಯೇ ಎಂಇಎಸ್ ತನ್ನ ಪುಂಡಾಟಿಕೆಯನ್ನು ಮೆರೆಯುತ್ತಿವೆ. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು ಎಂಇಎಸ್ ಗೆ ಸ್ಪಷ್ಟ ಕಠಿಣ ಸಂದೇಶ ನೀಡಬೇಕೆಂದು ಸಂಘಟನೆಗಳು ಒತ್ತಾಯಿಸುತ್ತಿವೆ.

ಮಾತ್ರವಲ್ಲ ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಂಘಟನೆಯನ್ನು ನಿಷೇಧಿಸಬೇಕು, ಕನ್ನಡ ಬಾವುಟವನ್ನು ಸುಟ್ಟುಹಾಕುವ, ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಸಂಘಟನೆಯನ್ನು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಕ್ರಿಯವಾಗಿರಲು ಬಿಡಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಒತ್ತಾಯಿಸಿದ್ದಾರೆ.

ಬೆಳಗಾವಿ ನಗರ ಕನ್ನಡಿಗರು ಮತ್ತು ಮಹಾರಾಷ್ಟ್ರ ನಡುವೆ ಸಿಟ್ಟು, ದ್ವೇಷ, ಆಕ್ರೋಶಕ್ಕೆ ಕಾರಣವಾಗಿರುವುದರಿಂದ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪರಿಸ್ಥಿತಿ ಬಹಳ ಸೂಕ್ಷ್ಮವಾಗಿದೆ. ತೀವ್ರ ಕಟ್ಟೆಚ್ಚರ ವಹಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಗೃಹ ಇಲಾಖೆಗೆ ಸೂಚಿಸಿದ್ದಾರೆ. ಬೆಳಗಾವಿಯಾದ್ಯಂತ 2500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಡಿಸೆಂಬರ್ 22ರ ಬೆಳಗ್ಗೆ 6 ಗಂಟೆಯವರಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ.

ದೇಶಭಕ್ತರನ್ನು ಗೌರವಿಸುವಂತೆ ನಾನು ಜನರಲ್ಲಿ ಮನವಿ ಮಾಡುತ್ತೇನೆ, ಅವರು ದೇಶಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ್ದಾರೆ, ಗೌರವಾರ್ಥವಾಗಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಮಹಾರಾಜರ ಪ್ರತಿಮೆಗಳನ್ನು ನಿರ್ಮಿಸಲಾಗಿದೆ, ನಾವು ಅವರನ್ನು ಗೌರವಿಸಿ ಘನತೆಯನ್ನು ಉಳಿಸಿಕೊಳ್ಳಬೇಕು. ಛತ್ರಪತಿ ಶಿವಾಜಿ, ಕಿತ್ತೂರು ರಾಣಿ ಚೆನ್ನಮ್ಮ ಅಥವಾ ವೀರ ಸಂಗೋಳಿ ರಾಯಣ್ಣ ಅವರೆಲ್ಲರೂ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ವಸಾಹತುಶಾಹಿ ಶಕ್ತಿಗಳ ವಿರುದ್ಧ ಹೋರಾಡಿದ್ದಾರೆ. ಭಾಷಾ ರಾಜಕಾರಣದ ಹೆಸರಿನಲ್ಲಿ ನಮ್ಮ ಯಾವುದೇ ಮಹಾನ್ ರಾಷ್ಟ್ರೀಯ ನಾಯಕರನ್ನು ಅವಮಾನಿಸುವುದು ಅವರ ರಾಷ್ಟ್ರೀಯತೆಯ ಮನೋಭಾವಕ್ಕೆ ಅಪಮಾನವಾಗಿದೆ ಮತ್ತು ಅದನ್ನು ಸಹಿಸಲಾಗುವುದಿಲ್ಲ, ಯಾವುದೇ ಸಂದರ್ಭದಲ್ಲೂ ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರಲು ಕಿಡಿಗೇಡಿಗಳಿಗೆ ನಾವು ಬಿಡುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Comments are closed.