ಕರ್ನಾಟಕ

ಪರೇಶ್ ಮೇಸ್ತನದ್ದು ಕೊಲೆಯಲ್ಲ, ಆಕಸ್ಮಿಕ ಸಾವು: ‘ಬಿ ರಿಪೋರ್ಟ್’ ಸಲ್ಲಿಸಿದ ಸಿಬಿಐ

Pinterest LinkedIn Tumblr

ಉತ್ತರಕನ್ನಡ: 2017ರ ಡಿಸೆಂಬರ್ 6ರಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದ್ದ ಗಲಭೆಯ ಬಳಿಕ ಶವವಾಗಿ ಪತ್ತೆಯಾಗಿದ್ದ ಮೀನುಗಾರ ಯುವಕ ಪರೇಶ್ ಮೇಸ್ತ ಸಾವು ಆಕಸ್ಮಿಕ ಎಂದು ಸಿಬಿಐ ಹೇಳಿದೆ. ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ ಬಿ ರಿಪೋರ್ಟ್ ನಲ್ಲಿ ಸಿಬಿಐ ಅಧಿಕಾರಿಗಳು, ಪರೇಶ್ ಮೇಸ್ತ ಹತ್ಯೆ ನಡೆದಿಲ್ಲ, ಬದಲಾಗಿ ಆತನದ್ದು ಆಕಸ್ಮಿಕವಾಗಿ ಸಂಭವಿಸಿದ ಸಾವು ಎಂದು ಉಲ್ಲೇಖಿಸಿದ್ದಾರೆ. ಸದ್ಯ ಸಿಬಿಐ ಸಲ್ಲಿಸಿರುವ ವರದಿಯನ್ನು ಹೊನ್ನಾವರ ಕೋರ್ಟ್‌ ಪರಿಶೀಲಿಸಿದೆ. ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 16ಕ್ಕೆ ಕೋರ್ಟ್ ತೀರ್ಪು ನೀಡಲಿದೆ.

2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ಗಲಭೆ ನಡೆದು, ಬಳಿಕ ಅದು ಕೋಮು ಸಂಘರ್ಷದ ರೂಪ ಪಡೆದಿತ್ತು. ಆಗ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಬಳಿಕ ಡಿಸೆಂಬರ್ 8ರಂದು ಹೊನ್ನಾವರ ನಗರದ ಬಸ್ ನಿಲ್ದಾಣದ ಮುಂದಿನ ಶನಿ ದೇವಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ.

ಪರೇಶ್ ಮೇಸ್ತನದ್ದು ಕೊಲೆ ಅಂತ ಕುಟುಂಬಸ್ಥರು, ಹಾಗೂ ಬಿಜೆಪಿ, ಹಿಂದೂ ಸಂಘಟನೆಗಳು ಆರೋಪಿಸಿದ್ದವು. ಪರೇಶ್ ಮೇಸ್ತನನ್ನು ಅನ್ಯ ಕೋಮಿನ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದರು. ಮೇಸ್ತಾನನ್ನು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು, ಹಿಂದೂ ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಈ ಘಟನೆ ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು.

ಪರೇಶ್ ಮೇಸ್ತನನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪ ಬಲವಾಗಿ ಕೇಳಿಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಹೊನ್ನಾವರ, ಕುಮಟಾ, ಮುಂಡಗೋಡದಲ್ಲಿ ಹಿಂದೂಪರ ಸಂಘಟನೆಗಳು ಡಿಸೆಂಬರ್‌ 11ರಂದು ಬಂದ್‌ಗೆ ಕರೆ ನೀಡಿದವು. ಕುಮಟಾದಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ ಹಿಂಸಾ ರೂಪಕ್ಕೆ ತಿರುಗಿತ್ತು. ಐಜಿಪಿ ಅವರ ಕಾರಿಗೆ ಬೆಂಕಿ ಹಚ್ಚಲಾಯಿತು. ಪೊಲೀಸರ ಮೇಲೆ ಕಲ್ಲು ತೂರಲಾಯಿತು. ಘಟನೆಯಲ್ಲಿ ಹಲವಾರು ಪೊಲೀಸರು ಗಾಯಗೊಂಡರು, ವಾಹನಗಳು ಜಖಂಗೊಂಡಿದ್ದವು.

ಪರೇಶ್ ಮೇಸ್ತ ಹತ್ಯೆ ಪ್ರಕರಣ ರಾಜ್ಯಾದ್ಯಂತ ತೀವ್ರ ಆಕ್ರೋಶ ಹಾಗೂ ಚರ್ಚೆಗೆ ಕಾರಣವಾಗಿತ್ತು. ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಬೇಕೆಂದು ಅಂದು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಒತ್ತಾಯಿಸಿದ್ದವು. ತೀವ್ರ ಒತ್ತಡಕ್ಕೆ ತಲೆಬಾಗಿದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.

ಈ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿತ್ತು. ಇದೀಗ ವಿಸ್ತೃತ ತನಿಖೆ ನಡೆಸಿ ನಾಲ್ಕೂವರೆ ವರ್ಷದ ನಂತರ ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ.

 

Comments are closed.