ಕುಂದಾಪುರ: ಗಂಗೊಳ್ಳಿ ಗ್ರಾಮದ ಮ್ಯಾಂಗನೀಸ್ ವಾರ್ಫ್ ಪ್ರದೇಶದಲ್ಲಿ ನಡೆದ ಅಗ್ನಿ ಅವಘಡ ಪ್ರದೇಶಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಗುರುವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮ್ಯಾಂಗನೀಸ್ ವಾರ್ಫ್ ಪ್ರದೇಶದಲ್ಲಿ ನಿಲ್ಲಿಸಿದ್ದ ಸುಮಾರು 8 ಮೀನುಗಾರಿಕೆ ಬೋಟುಗಳು ಹಾಗೂ ಒಂದು ದೋಣಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು ಘಟೆ ಬಗ್ಗೆ ಸಂಬಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಮೀನುಗಾರ ಮುಖಂಡರೊಂದಿಗೆ ಚರ್ಚೆ ನಡೆಸಿದರು.
ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮೀನುಗಾರರು ಪುನಃ ತಮ್ಮ ಬದುಕುನ್ನು ಕಟ್ಟಿಕೊಳ್ಳುವ ಉದ್ದೇಶದಿಂದ ಆದಷ್ಟೂ ಶೀಘ್ರ ಸರಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಬಿಡುಗಡೆಗೆ ಪ್ರಯತ್ನಿಸುವಂತೆ ಮನವಿ ಮಾಡಿದರು.
ಇದೇ ವೇಳೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಮುದ್ರವನ್ನು ನಂಬಿ ಬದುಕನ್ನು ಕಟ್ಟಿಕೊಂಡ ಮೀನುಗಾರರ ಬೋಟ್ ಅನಾಹುತ ಆಗಿ ಸುಮಾರು 10 ಕೋಟಿ ನಷ್ಟ ಆಗಿದೆ. ಅಗ್ನಿ ಅನಾಹುತದಲ್ಲಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ. 9 ಬೋಟುಗಳು, ದೋಣಿ, ಡಿಂಗಿ ಹಾಗೂ ಬಲೆಗಳು ಸುಟ್ಟು ಹೋಗಿದೆ. ಇದರಿಂದ ಮೀನುಗಾರರ ಜೀವನ ಸಂಪೂರ್ಣ ಹಾಳಾಗಿದೆ. ಈ ಬಗ್ಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರೊಂದಿಗೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಇಲ್ಲಿನ ಘಟನೆ ಬಗ್ಗೆ ತಿಳಿಸಿ ಪ್ರಕರಣದ ಗಂಭೀರತೆ ಬಗ್ಗೆ ಮನವರಿಕೆ ಮಾಡಲಾಗಿದೆ. ಆದ್ದರಿಂದ ಮೀನುಗಾರರು ಮತ್ತೊಮ್ಮೆ ಬದುಕನ್ನು ಕಟ್ಟಿಕೊಳ್ಳಲು ಸರಕಾರ ಸಹಾಯ ಸಹಕಾರ ನೀಡಬೇಕು. ಮುಖ್ಯಮಂತ್ರಿಗಳು ವಿಶೇಷ ಪರಿಹಾರ ರೂಪದಲ್ಲಿ 10 ಕೋಟಿ ರೂ. ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗಿದೆ ಎಂದರು.
ರಾಜ್ಯದ ಮೀನುಗಾರಿಕಾ ಸಚಿವರು ಘಟನಾ ಸ್ಥಳಕ್ಕೆ ಬಂದು ಇಲ್ಲಿನ ವಸ್ತುಸ್ಥಿತಿಯನ್ನು ನೋಡಿದ್ದಾರೆ. ಕಷ್ಟದ ಪರಿಸ್ಥಿತಿಯಲ್ಲಿ ಮೀನುಗಾರರ ಸಹಾಯ ಸಹಕಾರಕ್ಕೆ ಮುಖ್ಯಮಂತ್ರಿಗಳು ಹಾಗೂ ಸರಕಾರ ನಿಲ್ಲುವ ಭರವಸೆ ಇದೆ ಎಂದು ಹೇಳಿದ ಅವರು ಇನ್ನೊಂದು ವಾರದೊಳಗೆ ಸರಕಾರ ಪರಿಹಾರವನ್ನು ಬಿಡುಗಡೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದರು. ಕರಾವಳಿ ತೀರದಲ್ಲಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಪಂಪ್ ಹೌಸ್ ನಿರ್ಮಾಣದ ಬಗ್ಗೆ ಸರಕಾರದ ಗಮನ ಸೆಳೆಯಲಾಗುವುದು. ಕೇಂದ್ರ ಸರಕಾರದಿಂದ ವಿಶೇಷ ಯೋಜನೆ ತಯಾರಿಸಿ ಜಾರಿಗೊಳಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ರಾಜ್ಯ ಸರಕಾರ ಕೂಡ ಈ ಬಗ್ಗೆ ಗಮನಹರಿಸಬೇಕು. ಮೀನುಗಾರರಿಗೆ ಹಾಗೂ ಮೀನುಗಾರಿಕೆಗೆ ಸುರಕ್ಷತೆ ನೀಡಲು ಆದ್ಯತೆ ನೀಡಲು ಹೆಚ್ಚಿನ ಗಮನ ನೀಡಬೇಕಿದೆ ಎಂದು ಅವರು ಹೇಳಿದರು.
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ವಿನೋದ ಭಂಡಾರಿ, ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಬಿ.ಎಸ್.ಸುರೇಶ ಶೆಟ್ಟಿ, ಪುಷ್ಪರಾಜ್ ಶೆಟ್ಟಿ, ಶರತ್ ಕುಮಾರ್ ಶೆಟ್ಟಿ, ಸುರೇಂದ್ರ ಖಾರ್ವಿ, ನಾಗರಾಜ ಶೆಟ್ಟಿ ನಾರ್ಕಳಿ, ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಹರೀಶ ಮೇಸ್ತ, ಗ್ರಾಪಂ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಮೊದಲಾದವರು ಉಪಸ್ಥಿತರಿದ್ದರು.
Comments are closed.