ಕರಾವಳಿ

ಎ.18 ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ; ಬೈಂದೂರಿನ ಪ್ರತಿ ಬೂತ್ ಗಳ ದೇವಸ್ಥಾನದಲ್ಲಿ ವಿಶೇಷ ಪೂಜೆ

Pinterest LinkedIn Tumblr

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರೂ ಆದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರು ಎಪ್ರಿಲ್ 18ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಇದೇ ವೇಳೆಯಲ್ಲಿ ಬೈಂದೂರಿನ ವಿಧಾನಸಭಾ ಕ್ಷೇತ್ರದಿಂದ ಒಂದು ಲಕ್ಷ ಲೀಡ್ ಗಾಗಿ ಪ್ರತಿ ಬೂತ್ ಗಳಲ್ಲೂ ಬಿಜೆಪಿ ಕಾರ್ಯಕರ್ತರು ದೇವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿಸಲಿದ್ದಾರೆ.

ಬಿ.ವೈ. ರಾಘವೇಂದ್ರ ಅವರು ಈ ಬಾರಿ ಬೃಹತ್ ಅಂತರದ ಗೆಲುವು ಸಾಧಿಸಬೇಕು ಎಂಬ ಸಂಕಲ್ಪದೊಂದಿಗೆ ಈಗಾಗಲೇ ಬಿಜೆಪಿ ಮುಖಂಡರು, ಪ್ರಮುಖರು, ಕಾರ್ಯಕರ್ತರು ಕ್ಷೇತ್ರದಾದ್ಯಂತ ಪ್ರಚಾರ ಪ್ರಕ್ರಿಯೆ ಚುರುಕುಗೊಳಿಸಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದಿಂದಲೇ 1 ಲಕ್ಷಕ್ಕೂ ಅಧಿಕ ಲೀಡ್ ನೀಡಲು ಬಿಜೆಪಿಯಿಂದ ಸರ್ವ ಪ್ರಯತ್ನಗಳು ಸಾಗುತ್ತಿದೆ.

ಇದಕ್ಕೆ ಪೂರಕವಾಗಿ ಬಿ. ವೈ. ರಾಘವೇಂದ್ರ ಅವರು ನಾಮಪತ್ರ ಸಲ್ಲಿಸುವ ದಿನದಂದು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಬೂತ್ ಗಳ ದೇವಸ್ಥಾನದಲ್ಲಿ ಏಕಕಾಲದಲ್ಲಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಮತ್ತು ಒಂದು ಲಕ್ಷ ಲೀಡ್ ನೀಡಲು ವಿಶೇಷವಾದ ಸಂಕಲ್ಪವನ್ನು ಮಾಡಲಿದ್ದಾರೆ.

ನಾಮಪತ್ರ ಸಲ್ಲಿಕೆ ಸಮಾರಂಭಕ್ಕೆ ಬೈಂದೂರಿನ ಜನಪ್ರಿಯ ಶಾಸಕರಾದ ಗುರುರಾಜ ಗಂಟಿಹೊಳೆಯವರ ನೇತೃತ್ವದಲ್ಲಿ ಅಪಾರ ಸಂಖ್ಯೆಯಲ್ಲಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಶಿವಮೊಗ್ಗಕ್ಕೆ ತೆರಳಲಿದ್ದಾರೆ. ನಾಮಪತ್ರ ಸಲ್ಲಿಕೆ ಸಮಾರಂಭವನ್ನು ಯಶಸ್ವಿಯಾಗಿಸಲು ಬೈಂದೂರು ಕ್ಷೇತ್ರದಿಂದಲೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ವರಿಷ್ಠರೂ ಆದ ಎನ್.ಡಿ.ಎ ಮಿತ್ರಕೂಟದ ಎಚ್. ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಎಂಟಿಬಿ ನಾಗರಾಜ, ಬೈರತಿ ಬಸವರಾಜ ಸಹಿತ ಕ್ಷೇತ್ರ ವ್ಯಾಪ್ತಿಯ ಬಿಜೆಪಿ, ಜೆಡಿಎಸ್ ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾ, ಮಂಡಲ ಅಧ್ಯಕ್ಷರು, ಪದಾಧಿಕಾರಿಗಳು ಸಹಿತವಾಗಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ಯರು, ಹಿತೈಷಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಬೈಂದೂರು ಮಂಡಲ ಬಿಜೆಪಿ ಮಾಧ್ಯಮ ವಿಭಾಗ ಪ್ರಕಟನೆ ತಿಳಿಸಿದೆ.

Comments are closed.