ಬೆಂಗಳೂರು: ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರತಿಯೊಬ್ಬ ಕನ್ನಡಿಗನನ್ನು ಮರಳಿ ರಾಜ್ಯಕ್ಕೆ ಕ್ಷೇಮವಾಗಿ ಕರೆತರುವ ಸಂಕಲ್ಪದೊಂದಿಗೆ ಕರ್ನಾಟಕ ರಾಜ್ಯ ಸರ್ಕಾರವು ಕಾರ್ಯಾಚರಣೆಗೆ ಇಳಿದಿದೆ. ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ.
ಭಯೋತ್ಪಾದಕ ದಾಳಿಯಲ್ಲಿ ಹಲವು ಅಮಾಯಕರು ಬಲಿಯಾದ ಈ ದುಃಖದ ಗಳಿಗೆಯಲ್ಲಿ ನೊಂದ ಜನರ ಜೊತೆ ನಾವು ನಿಂತಿದ್ದೇವೆ. ತಮ್ಮವರನ್ನು ಕಳೆದುಕೊಂಡು ಪರಿತಪಿಸುತ್ತಿರುವ ಜೀವಗಳನ್ನು ಸಾಂತ್ವನಿಸುವ ಜೊತೆಗೆ ಮೃತರ ಶವಗಳನ್ನು ಅವರ ಮನೆಗೆ ತಲುಪಿಸುವ ಕಾರ್ಯವನ್ನು ಕೂಡ ಸಚಿವ ಸಂತೋಷ್ ಲಾಡ್ ಅವರು ಅತ್ಯಂತ ಶ್ರದ್ಧಾಪೂರ್ವಕವಾಗಿ ಮಾಡುತ್ತಿದ್ದಾರೆ. ಕಾಶ್ಮೀರದಲ್ಲಿ ನೆರವಿನ ನಿರೀಕ್ಷೆಯಲ್ಲಿರುವ ಎಲ್ಲ ಕನ್ನಡಿಗರನ್ನು ನಮ್ಮ ಸರ್ಕಾರ ತಲುಪಲಿದೆ ಎಂದು ಸಿಎಂ ತಿಳಿಸಿದರು.
ಸರಕಾರದಿಂದ ಸಹಾಯವಾಣಿ: ಉಗ್ರಕೃತ್ಯದಿಂದಾಗಿ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಧಾವಿಸಿದ್ದು, ಪ್ರವಾಸಿಗರ ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದೆ. ಪ್ರವಾಸಿಗರ ಸಂಬಂಧಿಕರು, ಪರಿಚಯಸ್ಥರು ಅಥವಾ ಟೂರ್ ಏಜೆನ್ಸಿಯವರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ನೀಡಲು ತಕ್ಷಣವೇ ಸಹಾಯವಾಣಿಗೆ ಕರೆ ಮಾಡಿ, ಮಾಹಿತಿ ನೀಡಲು ತಿಳಿಸಲಾಗಿದೆ.
ಸಹಾಯವಾಣಿ:
080-43344334
080-43344335
080-43344336
080-43344342
Comments are closed.