ಯಾದಗಿರಿ, ಜೂ. 8: ಅನಾರೋಗ್ಯದಿಂದ ಬಳಲುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಚಿರಂಜೀವಿ ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಚಿರಂಜೀವಿ ನಗರದ ಸೌಮ್ಯಶ್ರೀ (20) ಮೃತ ವಿದ್ಯಾರ್ಥಿನಿದ್ದಾಳೆ. ಈಕೆ ಬೆಂಗಳೂರಿನ ಅಮೃತಾ ಕಾಲೇಜಿನ ಎಂಜಿನಿಯರಿಂಗ್ ವಿಭಾಗದ ನಾಲ್ಕನೆ ಸೆಮಿಸ್ಟರ್ ವಿದ್ಯಾರ್ಥಿನಿಯಾಗಿದ್ದು, ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ತಮ್ಮ ಊರಿಗೆ ಆಗಮಿಸಿದ್ದಳು. ಆದರೆ ನಾಳೆಯಿಂದ ಎಂಜಿನಿಯರಿಂಗ್ ಪದವಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾಳೆ ಆಕೆ ಮತ್ತೆ ಬೆಂಗಳೂರಿಗೆ ತೆರಳಬೇಕಿತ್ತು. ಆದರೆ ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಡೆತ್ ನೋಟ್ ಬರೆದಿಟ್ಟು ಈಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಈ ಸಂಬಂಧ ಯಾದಗಿರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.